ADVERTISEMENT

ಭಾನುವಾರ ರಾಜ್ಯದಾದ್ಯಂತ ಪ್ರತಿಭಟನೆ: ಪ್ರಮೋದ್ ಮುತಾಲಿಕ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 16:41 IST
Last Updated 7 ಜನವರಿ 2023, 16:41 IST
   

ಬೆಳಗಾವಿ: ‘ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಮನೋಜ್‌ ದೇಸೂರಕರ್‌ ಮೇಲೆ ನಡೆದ ಗುಂಡಿನ ದಾಳಿ ಖಂಡನಾರ್ಹ. ನಿಮ್ಮ ಗುಂಡಿನ ದಾಳಿ, ಬಾಂಬ್‌, ಕತ್ತಿಗಳ ದಾಳಿಗೆ ನಾವು ಹೆದರುವುದಿಲ್ಲ. ಈ ಘಟನೆ ಖಂಡಿಸಿ ಭಾನುವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದ್ದಾರೆ.

ಗುಂಡಿನ ದಾಳಿ ನಂತರ ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ ಅವರು, ‘ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ನಡೆದ ದೊಡ್ಡ ದಾಳಿಗಳಲ್ಲಿ ಇದೂ ಒಂದು. ಹಿಂಡಲಗಾ ಕೇಂದ್ರ ಕಾರಾಗೃಹದ ಬಳಿಯೇ ಘಟನೆ ನಡೆದಿದೆ. ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳು ಇವೆ. ಅವುಗಳನ್ನು ಪರಿಶೀಲಿಸಿ ತಕ್ಷಣ ಆರೋಪಿಗಳನ್ನು ಬಂಧಿಸಬೇಕು’ ಎಂದೂ ಅವರು ಆಗ್ರಹಿಸಿದ್ದಾರೆ.

‘ಬೆಳಗಾವಿಯ ಸಂಭಾಜಿ ಉದ್ಯಾನದಲ್ಲಿ ಭಾನುವಾರ ಸಂಜೆ 5ಕ್ಕೆ ವಿರಾಟ್‌ ಹಿಂದೂ ಸಮಾವೇಶ ಆಯೋಜಿಸಲಾಗಿದೆ. ಈ ಕಾರ್ಯಕ್ರಮ ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ನಾನು ಕಾರ್ಯಕ್ರಮಕ್ಕೆ ಬಂದೇ ಬರುತ್ತೇನೆ’ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.