ಬೆಳಗಾವಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳ ಸಮೀಕ್ಷೆಯನ್ನು ಕೃಷಿ, ತೋಟಗಾರಿಕೆ, ರೇಷ್ಮೆ, ಕಂದಾಯ ಹಾಗೂ ಸಾಂಖ್ಯಿಕ ಇಲಾಖೆಯ ಸಹಯೋಗದಲ್ಲಿ ‘ಬೆಳೆ ದರ್ಶಕ್’ ಮೊಬೈಲ್ ಆ್ಯಪ್ ಬಳಸಿ ಪೂರ್ಣಗೊಳಿಸಲಾಗಿದೆ.
‘ಸಂಗ್ರಹವಾದ ಬೆಳೆಗಳ ಮಾಹಿತಿ ಕುರಿತು ಆಕ್ಷೇಪಣೆಗಳಿದ್ದಲ್ಲಿ ರೈತರು ಮೊಬೈಲ್ ಆ್ಯಪ್ ಬಳಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯ ಗ್ರಾಮವಾರು ಮಾಹಿತಿಯನ್ನು ಗ್ರಾಮ ಪಂಚಾಯತಿ ಸೂಚನಾಫಲಕಗಳಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ರೈತರಿಗೆ ಜ. 30ರವರೆಗೆ ಕಾಲಾವಕಾಶ ನೀಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಲಿಖಿತವಾಗಿಯೂ ಆಕ್ಷೇಪಣೆಗಳನ್ನು ದಾಖಲಿಸಬಹುದಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
‘ಬೆಳೆ ದರ್ಶಕ ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನಲೋಡ್ ಮಾಡಿಕೊಳ್ಳಬಹುದು. ಆ ಆ್ಯಪ್ ಮೂಲಕ, ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿ ದಾಖಲಾಗಿರುವುದನ್ನು ಛಾಯಾಚಿತ್ರ ಸಮೇತವಾಗಿ ವೀಕ್ಷಿಸಬಹುದು. ಬೆಳೆಗಳಿಗೆ ಸಂಬಂಧಿಸಿದ ಏನಾದರೂ ಆಕ್ಷೇಪಣೆ ಇದ್ದರೆ ಅತ್ಯಂತ ಸುಲಭವಾಗಿ ದಾಖಲಿಸಬಹುದು ಅಥವಾ ಧ್ವನಿ ಮುದ್ರಣ ಮಾಡುವುದರ ಮೂಲಕ ಸಲ್ಲಿಸಬಹುದು. ಇದು ಅತ್ಯಂತ ಮಹತ್ವದ್ದಾಗಿರುವುದರಿಂದ, ನಿರ್ಲಕ್ಷ್ಯ ಮಾಡಬಾರದು’ ಎಂದು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.