ADVERTISEMENT

ತೇವಾಂಶದಿಂದ ಬೆಳೆ ಕುಂಠಿತ: ಕೀಟ ಬಾಧೆ ನಿಯಂತ್ರಣಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 14:09 IST
Last Updated 28 ಸೆಪ್ಟೆಂಬರ್ 2020, 14:09 IST

ಬೆಳಗಾವಿ: ‘ಜಿಲ್ಲೆಯಲ್ಲಿ ಈ ತಿಂಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಇದರಿಂದಾಗಿ ಸವದತ್ತಿ ತಾಲ್ಲೂಕಿನ ಹೂಲಿ ಮತ್ತು ಕರೀಕಟ್ಟಿ ಗ್ರಾಮಗಳ ಕೃಷಿ ಜಮೀನಿನಲ್ಲಿ ನೀರು ಬಸಿದು ಹೋಗದೆ ಇರುವುದರಿಂದ ಗೋವಿನ ಜೋಳ, ಸಜ್ಜೆ, ಹತ್ತಿ, ಸೂರ್ಯಕಾಂತಿ, ಶೇಂಗಾ ಜಮೀನುಗಳಲ್ಲಿ ತೇವಾಂಶ ಹೆಚ್ಚಳದಿಂದ ಬೆಳೆಗಳು ಕುಂಠಿತವಾಗುವ ಸಂಭವವಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.

ಜಮೀನುಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿರುವ ಅವರು, ‘ತೇವಾಂಶದಿಂದ ಬೆಳೆ ಕುಂಠಿತಗೊಳ್ಳುತ್ತಿರುವುದರಿಂದ ರೈತರು ನೀರನ್ನು ಹೊರಹಾಕಲು ಕ್ರಮ ವಹಿಸಬೇಕು’ ಎಂದು ಸಲಹೆ ನೀಡಿದ್ದಾರೆ.

‘ವಾತಾವರಣದಲ್ಲಿ ಹೆಚ್ಚಿನ ತೇವಾಂಶ ಇರುವುದರಿಂದ ಈ ಬೆಳೆಗಳಲ್ಲಿ ಕೀಟ ರೋಗ ಬಾಧೆ ಕಂಡುಬರುವ ಸಂಭವವಿದೆ. ಕಾರಣ, ರೋಗ, ಕೀಟ ಬಾಧೆಗೆ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು. ನೀರು ನಿಲ್ಲುವುದರಿಂದ ಬೆಳೆಗಳ ಬಣ್ಣ ಹಳದಿ/ಬಿಳಿಯಾಗಿ ಕಂಡುಬಂದಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರಗಳಾದ ಮೊನೊ ಅಮೋನಿಯಂ ಪಾಸ್ಟೇಟ್ ಹಾಗೂ ಪೊಟ್ಯಾಸಿಂ ನೈಟ್ರೇಟ್ ರಸಗೊಬ್ಬರಗಳನ್ನು 5 ಗ್ರಾಂ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಅಥವಾ ನೀರಿನಲ್ಲಿ ಕರಗುವ ರಸಗೊಬ್ಬರ 10 ಗ್ರಾಂ. ಅನ್ನು ಲೀಟರ್‌ ನೀರಿಗೆ ಬೆರೆಸಿ ಸಿಂಪಡಿಸಬೇಕು’ ಎಂದು ಸಲಹೆ ನೀಡಿದ್ದಾರೆ.

ADVERTISEMENT

‘ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಲಹೆ ಪಡೆಯಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.