ಬೆಳಗಾವಿ: ‘ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು’ ಎಂದು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಇಲ್ಲಿನ ಎಚ್.ಡಿ. ಕುಮಾರಸ್ವಾಮಿ ಬಡಾವಣೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ಪ್ಲಾಸ್ಟಿಕ್ ಮುಕ್ತ ಬೆಳಗಾವಿ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ತಿಳಿದೋ ತಿಳಿಯದೆಯೋ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದೇವೆ. ಇದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಸಮುದ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಸೇರುತ್ತಿದೆ. ಪರಿಣಾಮ ಜಲಚರಗಳು ಸಂಕಷ್ಟಕ್ಕೆ ಒಳಗಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಎಲ್ಲರೂ ಸಹಕರಿಸಬೇಕು. ಪ್ಲಾಸ್ಟಿಕ್ ತ್ಯಜಿಸಬೇಕು’ ಎಂದು ಸಲಹೆ ನೀಡಿದರು.
‘ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡಿದ್ದಾರೆ. ಅದಕ್ಕೆ ಎಲ್ಲರೂ ಕೈ ಜೋಡಿಸುವ ಅಗತ್ಯವಿದೆ’ ಎಂದರು.
ಸಾನ್ನಿಧ್ಯ ವಹಿಸಿದ್ದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಬೆಳಗಾವಿಯಿಂದ ಪ್ರಾರಂಭಿಸಿರುವ ಪಾಸ್ಲಿಕ್ ಮುಕ್ತ ಅಭಿಯಾನ ಪ್ರಧಾನಿ ನರೇಂದ್ರ ಮೋದಿ ಅವರ ಗಮನಸೆಳೆದಿದೆ. ಒಂದು ವರ್ಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಜನರು ಬಳಸುವುದನ್ನು ತ್ಯಜಿಸಿದಾಗ ಮಾತ್ರ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.
ನ್ಯಾಯಾಧೀಶ ಮಹಾದೇವಯ್ಯ, ಮುಖಂಡರಾದ ಬಿ.ಐ. ಪಾಟೀಲ, ಅರವಿಂದ ಜೋಶಿ, ವಿರೂಪಾಕ್ಷಯ್ಯ ನೀರಲಗಿಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.