ಬೆಳಗಾವಿ: ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಗುರುವಾರ ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್ನಲ್ಲಿ ಧರಣಿ ನಡೆಸಿದರು.
ಸಂಘದ ಉಪಾಧ್ಯಕ್ಷ ಆರ್.ಎಚ್. ದಂಡಗಲ್ ಮಾತನಾಡಿ, ‘ಸತತ 10 ವರ್ಷಗಳಿಂದ ಎ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು 2017ರ ವರ್ಗಾವಣೆ ಕಾಯ್ದೆ ಅನ್ವಯ ಕಡ್ಡಾಯವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದೆ. ಶೀಘ್ರವೇ ಸರ್ಕಾರ ಇದನ್ನು ರದ್ದುಪಡಿಸಿ, ಶಿಕ್ಷಕರ ಹಿತ ಕಾಪಾಡಬೇಕು’ ಎಂದು ಒತ್ತಾಯಿಸಿದರು.
‘ಕಡ್ಡಾಯ ವರ್ಗಾವಣೆ ಎನ್ನುವುದು ಶಿಕ್ಷೆಯಾಗಿ ಪರಿಣಮಿಸಿದೆ. ಯಾವುದೇ ತಪ್ಪು ಮಾಡದ ಹಾಗೂ ಇಲಾಖೆ ನೀಡಿದ ಎಲ್ಲ ಜವಾಬ್ದಾರಿಗಳನ್ನು ಹೊತ್ತು ಸಮರ್ಪಕವಾಗಿ ಕೆಲಸ ನಿರ್ವಹಿಸುವ ಶಿಕ್ಷಕರಿಗೆ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಇದ್ದರಿಂದ ಶಿಕ್ಷಕರಿಗೆ ಸಮಸ್ಯೆ ಎದುರಾಗಿದೆ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಂಡು ಶಿಕ್ಷಕರ ಬೇಡಿಕೆ ಈಡೇರಿಸಬೇಕು’ ಎಂದು ಆಗ್ರಹಿಸಿದರು.
ಮುಖಂಡರಾದ ಜಿ.ಎಂ. ಪಾಟೀಲ, ಎಸ್.ಬಿ. ನಟವಗಿ, ಎನ್.ಕೆ. ಕಾಗತಿಕರ, ಜಿ.ಎಸ್. ಮಣ್ಣಿಕೇರಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.