ADVERTISEMENT

ಬಸವಣ್ಣನವರ ಕುರಿತು ತಪ್ಪಾಗಿ ಪ್ರಕಟಿಸಿದ ಮಾಹಿತಿ ಸರಿಪಡಿಸಿ: ಬಸವ ಸೇನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 9:01 IST
Last Updated 2 ಜೂನ್ 2022, 9:01 IST
ಬಸವಣ್ಣ
ಬಸವಣ್ಣ   

ಬೆಳಗಾವಿ: ‘9ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತ ‍ಪಾಠದಲ್ಲಿ ತಪ್ಪು ಮಾಹಿತಿ ಪ್ರಕಟಿಸಿರುವುದು ಸರಿಯಲ್ಲ’ ಎಂದು ಆರೋಪಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ರಾಷ್ಟ್ರೀಯ ಬಸವ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

‘‍ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿದ ಪಠ್ಯಕ್ರಮದಲ್ಲಿ ಹತ್ತು– ಹಲವು ದೋಷಗಳಿವೆ. ಉಪನಯನವಾದ ನಂತರ ಬಸವಣ್ಣನವರು ಕೂಡಲಸಂಗಮಕ್ಕೆ ಹೊರಟರು ಎಂದು ಬರೆಯಲಾಗಿದೆ. ವಾಸ್ತವವಾಗಿ ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ ಎಂದು ಧಿಕ್ಕರಿಸಿ ಅವರು ಕೂಡಲಸಂಗಮಕ್ಕೆ ಹೋಗಿದ್ದಾರೆ. ಅಲ್ಲದೆ, ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಬರೆಯಲಾಗಿದೆ. ಇದು ಕೂಡ ತಪ್ಪು’ ಎಂದು ದೂರಿದರು.

‘ಈ ಪಠ್ಯಕ್ರಮದಲ್ಲಿ ಬಸವಣ್ಣನವರ ಕುರಿತು ಬಹಳಷ್ಟು ವಿಷಯಗಳನ್ನು ತಪ್ಪಾಗಿ ಮುದ್ರಿಸಲಾಗಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಇದರಿಂದ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮ ಹಾಗೂ ಬಸವಣ್ಣನವರಿಗೆ ಅಪಚಾರ ಎಸಗಿದಂತಾಗುತ್ತದೆ. ಅಲ್ಲದೆ, ಬಸವಣ್ಣನವರು ವೈದಿಕ ಧರ್ಮದ ಆಚರಣೆಗಳನ್ನು ನಿರಾಕರಿಸಿದರು. ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದರು ಎಂಬ ಅಂಶ ಕೈಬಿಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಗಮನಹರಿಸಿ, ತಪ್ಪು ಸರಿಪಡಿಸುವ ಕೆಲಸವಾಗಬೇಕಿದೆ. ಇಲ್ಲದಿದ್ದರೆ ಲಿಂಗಾಯತರು ಹಾಗೂ ಲಿಂಗಾಯತ ಮಠಾಧೀಶರು ನಾಡಿನಾದ್ಯಂತ ಉಗ್ರಹೋರಾಟ ಕೈಗೊಳ್ಳುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜ ರೊಟ್ಟಿ, ರಾಷ್ಟ್ರೀಯ ಬಸವ ಸೇನೆ ಅಧ್ಯಕ್ಷ ಶಂಕರ ಗುಡಸ್‌, ಉಪಾಧ್ಯಕ್ಷ ಎ.ವೈ. ಬೆಂಢಿಗೇರಿ, ನಗರ ಘಟಕದ ಅಧ್ಯಕ್ಷ ಎಸ್‌.ಜಿ. ಸಿದ್ನಾಳ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಎಂ. ಬೂದಿಹಾಳ, ಅರವಿಂದ ಪಾರುಶೆಟ್ಟಿ ಇತರರು ಹಾಜರಿದ್ದರು.

ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ರಾಷ್ಟ್ರೀಯ ಬಸವ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.