ಮುಗಳಖೋಡ: ಇಲ್ಲಿ ಪುರಸಭೆಯಿಂದ ನಿರ್ಮಿಸಿರುವ ಶೌಚಾಲಯಗಳು ಬಳಕೆಗೆ ಬಾರದಂತಾಗಿ ಇದ್ದೂ ಇಲ್ಲದಂತಾಗಿವೆ.
‘ಜನಪರ ಕಾಳಜಿಯಿಂದ ಸರ್ಕಾರವು ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ. ಅದನ್ನು ಸರಿಯಾಗಿ ಅನುಷ್ಠಾನಕ್ಕೆ ಬರುವಂತೆ ನೋಡಿಕೊಳ್ಳುವುದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕರ್ತವ್ಯವಾಗಿದೆ. ಆದರೆ, ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿ ಕಳಪೆ ಕಾಮಗಾರಿಗಳನ್ನು ಮಾಡುವ ಮೂಲಕ ಸರ್ಕಾರದ ಹಣ ದುರ್ಬಳಕೆಯಾದರೆ ಅದಕ್ಕೆ ಹೊಣೆ ಯಾರು’ ಎನ್ನುವುದು ಜನರ ಪ್ರಶ್ನೆಯಾಗಿದೆ.
ಪುರಸಭೆಯಿಂದ 2016–17ರಿಂದ 2019–20ರವರೆಗೆ ನಾನಾ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಂಡಿವೆ. ಅದರೆ, ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುತ್ತಿಲ್ಲ ಎನ್ನುವ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ.
ನಗರೋತ್ಥಾನ ಯೋಜನೆಯಲ್ಲಿ ವಾರ್ಡ್ ಸಂಖ್ಯೆ 5ರಲ್ಲಿ 3 ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಎರಡು ವರ್ಷಗಳೇ ಕಳೆದರೂ ಅವುಗಳನ್ನು ಬಳಸಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ಒಂದರಲ್ಲೂ ನೀರಿನ ವ್ಯವಸ್ಥೆ ಇಲ್ಲದಿರುವುದು. ಶೌಚಾಲಯದ ಒಳ ಹೊರಗೆಲ್ಲ ಮಲ–ಮೂತ್ರ ವಿಸರ್ಜನೆ ಮಾಡಿರುವುದರಿಂದ ದುರ್ವಾಸನೆಯಿಂದ ಕೂಡಿದೆ.
ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿ ಹೋಗುವ ಶಾಸಕರಾಗಲಿ, ಪುರಸಭೆ ಸದಸ್ಯರಾಗಲಿ ಅಥವಾ ಅಧಿಕಾರಿಗಳಾಗಲಿ ಇತ್ತ ಗಮನಹರಿಸಿಲ್ಲ. ಕಾಮಗಾರಿಯ ಗುಣಮಟ್ಟವನ್ನು ವೀಕ್ಷಿಸಿಲ್ಲ. ಇದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.