ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ಗೆ ಕೀಟನಾಶಕ ಸುರಿದ ಆರೋಪದ ಮೇಲೆ ಗ್ರಾಮದ ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಎಂಬುವರನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಶ್ರೀರಾಮ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಸಾಗರ ಪಾಟೀಲ, 13 ವರ್ಷಗಳಿಂದ ಶಾಲೆಯ ಮುಖ್ಯಶಿಕ್ಷಕರು ಆಗಿರುವ ಸುಲೇಮಾನ್ ಗೋರಿನಾಯ್ಕ ಅವರ ವರ್ಗಾವಣೆ ಬಯಸಿದ್ದ. ಕೃತ್ಯದ ಮೂಲಕ ಮುಖ್ಯಶಿಕ್ಷಕನಿಗೆ ಕೆಟ್ಟ ಹೆಸರು ತರಲು ಬಯಸಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದರು.
‘ಹೂಲಿಕಟ್ಟಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ, ಕೀಟನಾಶಕ ಬೆರೆಸಿದ್ದ ನೀರನ್ನು ಕುಡಿದು 11 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಗುಣಮುಖರಾದರು’ ಎಂದರು.
‘ಮೂವರು ಆರೋಪಿಗಳು ಪರಸ್ಪರ ಪರಿಚಿತರು. ಸಾಗರ ಡಾಬಾ ನಡೆಸುತ್ತಿದ್ದು, ನಾಗನಗೌಡ ಆತನ ಸಂಬಂಧಿ. ಸಾಗರನೊಂದಿಗೆ ಈ ಹಿಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೃಷ್ಣ, ಬೇರೆ ಜಾತಿ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದ. ಅದನ್ನು ಬಹಿರಂಗಪಡಿಸುವುದಾಗಿ ಸಾಗರ ಬೆದರಿಸಿ, ಕೃಷ್ಣ ಮೂಲಕ ಈ ಕೃತ್ಯ ಎಸಗಿದ್ದ. ಇದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಆಮಿಷವೊಡ್ಡಿ ಬಳಸಿಕೊಳ್ಳಲಾಗಿತ್ತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.