ಬೆಳಗಾವಿ: ‘ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿ ಮತ್ತು ಹಾಲು ಉತ್ಪಾದನೆ ಪ್ರಮಾಣ ಹೆಚ್ಚಿಸುವುದಕ್ಕೆ ಮುಂದಾಗಬೇಕಾದ ಅಗತ್ಯವಿದೆ’ ಎಂದು ರಾಜ್ಯ ಸಹಕಾರ ಮಹಾಂಡಳದ ನಿರ್ದೇಶಕ ಬಸವರಾಜ ಎಸ್. ಸುಲ್ತಾನಪುರಿ ಹೇಳಿದರು.
ಸಹಕಾರ ಇಲಾಖೆ, ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿ, ಖಾನಾಪುರ ಹಾಗೂ ಹುಕ್ಕೇರಿ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಇಒಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲು ಉತ್ಪಾದನೆ ಪ್ರಮಾಣ ಕಡಿಮೆ ಇದೆ. ಕೋಲಾರ ಜಿಲ್ಲೆ ನಮಗಿಂತ ಕಡಿಮೆ ಹಸಿರು ಪ್ರದೇಶ ಹೊಂದಿದ್ದರೂ ಹಾಲು ಉತ್ಪಾದನೆಯಲ್ಲಿ ನಮಗಿಂತ ಮುಂದಿದೆ. ಅತಿ ಹೆಚ್ಚು ತೇವಾಂಶ ಮತ್ತು ಹಸಿರು ಪ್ರದೇಶ ಹೊಂದಿದ ನಾವು ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ತಿಳಿಸಿದರು.
ಹಾಲು ಒಕ್ಕೂಟದ ನಿರ್ದೇಶಕ ಕಲ್ಲಪ್ಪ ನಿ. ಗಿರೆನ್ನವರ ಮಾತನಾಡಿ, ‘ಯಾವುದೇ ಸಂಘಕ್ಕೆ ತರಬೇತಿ ತುಂಬಾ ಅವಶ್ಯವಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು, ಹೈನುಗಾರಿಕೆಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಹಾಲು ಉತ್ಪಾದನೆಗೆ ಒತ್ತು ನೀಡಬೇಕು’ ಎಂದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಐ.ಬಿ. ಇಂಗಳಗಿ ಮಾತನಾಡಿ, ‘ಕಾರ್ಯದರ್ಶಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರೆ ಸಂಘದ ಬೆಳವಣಿಗೆ ಸಾಧ್ಯವಾಗುತ್ತದೆ. ಇದಕ್ಕಾಗಿ ತರಬೇತಿ ಅಗತ್ಯವಾಗಿದೆ’ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಸಗೌಡ ಡಿ. ಪಾಟೀಲ ಮಾತನಾಡಿ, ‘ಸರ್ಕಾರದಿಂದ ದೊರೆಯುತ್ತಿರುವ ಪ್ರೋತ್ಸಾಹಧನವನ್ನು ಸಂಘದ ಪ್ರತಿ ಸದಸ್ಯರಿಗೂ ತಲುಪಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಇತ್ತೀಚೆಗೆ ಸಹಕಾರ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ಆಗುತ್ತಿವೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಅದಕ್ಕೆ ತಕ್ಕಂತೆ ಕಾರ್ಯಚಟುವಟಿಕೆಯಲ್ಲೂ ಬದಲಾವಣೆ ಮಾಡಿಕೊಂಡು ರೈತರ ಉನ್ನತಿಗೆ ಶ್ರಮಿಸಬೇಕು’ ಎಂದು ಸೂಚಿಸಿದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಹಿರಿಯ ನಿರೀಕ್ಷಕ ಶಂಕರ ಎಸ್. ಕರಿಬಸಣ್ಣವರ, ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಉಪ ವ್ಯವಸ್ಥಾಪಕ ವಿ.ಕೆ. ಜೋಶಿ ಉಪನ್ಯಾಸ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್ ಉಪಾಧಕ್ಷ ಬಸವಂತರಾಯ ಎನ್. ಉಳ್ಳೇಗಡ್ಡಿ, ನಿರ್ದೇಶಕರಾದ ಆರ್.ವಿ. ಕೋಟಗಿ, ಜಿ.ಎಲ್. ಕಂಕಣವಾಡಿ, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ರಾಯಪ್ಪ ಬಿ. ಡೋಗ ಮತ್ತು ಪ್ರಕಾಶ ವೈ. ಅಂಬೊಜಿ ಇದ್ದರು.
ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಎಸ್.ವಿ. ಹಿರೇಮಠ ಸ್ವಾಗತಿಸಿದರು. ಜಿಲ್ಲಾ ಸಹಕಾರ ಶಿಕ್ಷಕ ಎಸ್.ಎಚ್. ಗೊಲ್ಲರ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.