ಬೆಳಗಾವಿ: ಮತ್ತಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರದಿಂದ ಸವದತ್ತಿ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಗೋವಿನಜೋಳದ ಸಮಗ್ರ ಬೆಳೆ ನಿರ್ವಹಣೆ ಕುರಿತು ಈಚೆಗೆ ತರಬೇತಿ ಕಾರ್ಯಕ್ರಮ ನಡೆಸಲಾಯಿತು.
ಕೇಂದ್ರದ ವಿಜ್ಞಾನಿ ಎಸ್.ಎಂ. ವಾರದ, ‘ಗ್ರಾಮದ ಆಯ್ದ ರೈತರ ಜಮೀನುಗಳಲ್ಲಿ ನಿರ್ವಹಣೆ ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ. ರೈತರು ಅಲ್ಲಿ ಅಳವಡಿಸಿದ ತಂತ್ರಜ್ಞಾನಗಳ ಮಾಹಿತಿ ಪಡೆದು ಅಧಿಕ ಇಳುವರಿ ತೆಗೆಯಲು ಪ್ರಯತ್ನಿಸಬೇಕು. ಸಮಗ್ರ ಪೋಷಕಾಂಶ ನಿರ್ವಹಣೆಗೆ ನೀರಾವರಿಯಲ್ಲಿ ಎಕರೆಗೆ 4 ಟನ್ ಮತ್ತು ಮಳೆಯಾಶ್ರಿತದಲ್ಲಿ 3 ಟನ್ ಕೊಟ್ಟಿಗೆ ಗೊಬ್ಬರ ಬಳಸಬೇಕು’ ಎಂದು ಸಲಹೆ ನೀಡಿದರು.
ಬೇಸಾಯ ತಜ್ಞ ಜಿ.ಬಿ. ವಿಶ್ವನಾಥ, ‘ಗೋವಿನ ಜೋಳದಲ್ಲಿ ಕಳೆ ನಿರ್ವಹಣೆಗೆ 1.33 ಗ್ರಾಂ. ಅಟ್ರಾಜಿನ್ 50 ಡಬ್ಲ್ಯುಪಿ ಕಳೆನಾಶಕವನ್ನು ಪ್ರತಿ ಲೀಟರ್ ನೀರಿನಲ್ಲಿ ಕರಗಿಸಿ ಬಿತ್ತನೆಯಾದ ದಿನ ಅಥವಾ ಮರು ದಿನ ಮಣ್ಣಿನ ಮೇಲೆ ಸಿಂಪಡಿಸಬೇಕು. ಇದರಿಂದ ಬೀಜದಿಂದ ಹರಡುವ ಕಳೆಗಳನ್ನು ನಿಯಂತ್ರಿಸಬಹುದು’ ಎಂದು ಮಾಹಿತಿ ನೀಡಿದರು.
ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ಎಸ್.ಎಸ್. ಹಿರೇಮಠ, ‘ಗೋವಿನ ಜೋಳದಲ್ಲಿ ಕಾಣಿಸಿಕೊಳ್ಳುವ ಲದ್ದಿ ಹುಳಗಳ ನಿರ್ವಹಣೆಗೆ ಮೋಹಕ ಬಲೆಗಳನ್ನು ಅಳವಡಿಸಬೇಕು. 0-2 ಇಮಾಮೆಕ್ಟಿನ್ ಬೆಂಜೋಯೆಟ್ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸುಳಿಯಲ್ಲಿ ಸಿಂಪಡಿಸಬೇಕು’ ಎಂದು ತಿಳಿಸಿದರು.
ಕೇಂದ್ರದ ಮುಖ್ಯಸ್ಥೆ ಶ್ರೀದೇವಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.