ಬೆಳಗಾವಿ: ‘ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಯಾವುದೇ ಕಾನೂನು ಅಥವಾ ನಿಯಮಗಳು ಉಲ್ಲಂಘನೆಯಾದಲ್ಲಿ, ಸರಿಯಾದ ಕಾಯ್ದೆಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಬೇಕು. ಆ ಸಂದರ್ಭಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಸಲಹೆ ನೀಡಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸು ತಿಳಿಸಿದರು.
ನಗರದಲ್ಲಿ ಕಾರ್ಮಿಕ ಇಲಾಖೆಯ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳು ಹಾಗೂ ಇನ್ಸ್ಪೆಕ್ಟರ್ಗಳಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಇಲಾಖೆಯ ಅಧಿಕಾರಿಗಳು ಕರ್ತವ್ಯದ ಜೊತೆಗೆ ವಿವಿಧ ತರಬೇತಿಗಳನ್ನು ಪಡೆಯಬೇಕು. ಕಾನೂನು– ಕಾಯ್ದೆಗಳ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಸವಾಲುಗಳು ಎದುರಾದರೂ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಲಿವೆ’ ಎಂದು ಹೇಳಿದರು.
‘ಅಧಿಕಾರಿಗಳು ದಾಳಿ ನಡೆಸಿದಾಗ ಹೆಚ್ಚಿನ ಸಾಕ್ಷಿ ಸಂಗ್ರಹಿಸಬೇಕು. ಪ್ರಸ್ತುತ ತಂತ್ರಜ್ಞಾನ ಬಳಕೆಯ ಮೂಲಕ ವಿಡಿಯೊ ಹಾಗೂ ಫೋಟೊ ಸಾಕ್ಷಿ ಸಂಗ್ರಹಿಸಿ ಪ್ರಕರಣ ದಾಖಲಿಸಬೇಕು’ ಎಂದು ಸಲಹೆ ನೀಡಿದರು.
ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಅಧಿಕಾರಿಗಳಾದ ಕೆ.ಜಿ. ಜಾನ್ಸನ್, ಸಂಗಮೇಶ ಹಿರೇಮಠ, ವಕೀಲರಾದ ಅಶೋಕ ಹಲಗಲಿ, ಶ್ರೀಕಾಂತ ಕೆ.ಎಸ್, ಕಾರ್ಮಿಕ ಅಧಿಕಾರಿ ತರನ್ನುಂ ಬೆಂಗಾಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.