ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದರಿಂದ, ಮತದಾನ ದಿನದಂದು ಚುನಾವಣಾ ಕೆಲಸಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆಗಾಗಿ ‘ಪ್ಲಾನ್ ಬಿ’ ಸಿದ್ಧಪಡಿಸಿದೆ.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್ಕುಮಾರ್ ಈ ವಿಷಯ ತಿಳಿಸಿದರು.
‘ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಸಾಗಿಸಲು ಮತ್ತು ಸಿಬ್ಬಂದಿಯನ್ನು ಕರೆದೊಯ್ಯಲು ಬಸ್ ಮೊದಲಾದ ವಾಹನಗಳು ಬೇಕಾಗುತ್ತವೆ. ಅದಕ್ಕಾಗಿ ರಾಜ್ಯದ ಬಸ್ಗಳ ಲಭ್ಯತೆ ಬಗ್ಗೆ ನಿರೀಕ್ಷಿಸುತ್ತಿದ್ದೇವೆ. ಇಲ್ಲವಾದಲ್ಲಿ ಪರ್ಯಾಯ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದೇವೆ’ ಎಂದರು.
‘ಚುನಾವಣೆಯಂದು 400 ಬಸ್ಗಳು ಬೇಕಾಗುತ್ತದೆ. ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದರಿಂದಾಗಿ, ಮುಂಜಾಗ್ರತಾ ಕ್ರಮವಾಗಿ ಖಾಸಗಿ ಬಸ್ಗಳ ಪ್ರವರ್ತಕರೊಂದಿಗೆ ಚರ್ಚಿಸಿದ್ದೇವೆ. ನೆರೆಯ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯನ್ನೂ ಸಂಪರ್ಕಿಸಿದ್ದೇವೆ. 500 ಬಸ್ಗಳನ್ನು ಒದಗಿಸಲು ಅವರು ಸಿದ್ಧವಿದ್ದಾರೆ. ನಮ್ಮ ರಾಜ್ಯದ ಬಸ್ಗಳೇ ಸಿಕ್ಕರೆ ಅನುಕೂಲ. ಅಲ್ಲಿವರೆಗೆ ಏನಾಗುತ್ತದೆಯೋ ನೋಡೋಣ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.