ಬೆಳಗಾವಿ: ಇಲ್ಲಿನ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಮನಾಪುರ ಬಳಿ ಬುಧವಾರ ಮಧ್ಯಾಹ್ನ ನಡೆದ ಅಪಘಾತದಲ್ಲಿ ಲಾರಿ ಹಾಗೂ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
‘ತಾಲ್ಲೂಕಿನ ಕಡೋಲಿಯ ಸುನೀಲ್ ಬಗರೆ, ವಿವೇಕ ಬಿರ್ಜೆ ಹಾಗೂ ರಿತೇಶ್ ಪರುಶುರಾಮ ಕಣಬರಗಿಯಿಂದ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಎಪಿಎಂಸಿಯಲ್ಲಿ ಈರುಳ್ಳಿ ಇಳಿಸಿ, ಕೊಲ್ಹಾಪುರದ ಕಡೆಗೆ ಹೋಗುತ್ತಿದ್ದ ಲಾರಿಯು ದ್ವಿಚಕ್ರವಾಹನಕ್ಕೆ ತಾಕಿದೆ. ಆಗ, ಮೂವರೂ ಎಡಕ್ಕೆ ಬಿದ್ದಿದ್ದಾರೆ; ಬೈಕ್ ಲಾರಿ ಕೆಳಗಡೆಗೆ ಹೋಗಿದೆ. ನಂತರ ಬೈಕ್ನ ಟ್ಯಾಂಕ್ನಲ್ಲಿದ್ದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಅದು ಲಾರಿಗೂ ವ್ಯಾಪಿಸಿದೆ ಎಂದು ಗೊತ್ತಾಗಿದೆ’ ಪೊಲೀಸರು ಮಾಹಿತಿ ನೀಡಿದರು.
ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇತರ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಸಾಗಿದವು. ವಿಷಯ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದರು.
ಗಾಯಗೊಂಡಿರುವ ಸುನೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.