
ಬೆಳಗಾವಿಯಲ್ಲಿ ನಡೆದ ರಾಷ್ಟೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ: ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದರು
ಬೆಳಗಾವಿ: ‘ನವೆಂಬರ್ 24ರಿಂದ ಡಿಸೆಂಬರ್ 9ರವರೆಗೆ ನಡೆಯಲಿರುವ ಕ್ಷಯರೋಗ ಪತ್ತೆಹಚ್ಚುವ ಅಭಿಯಾನ ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಶ್ರಮಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಭೇಟಿ ನೀಡಿ ನಿರಂತರ ಪರೀಕ್ಷೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ: ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ರಾಯಬಾಗ ತಾಲ್ಲೂಕಿನಲ್ಲಿ ಕ್ಷಯರೋಗ ಮುಕ್ತ ಅಭಿಯಾನ ಪರಿಣಾಮಕಾರಿ ಜಾರಿಯಾಗುವಂತೆ ಸಮೀಕ್ಷೆ ಕೈಗೊಳ್ಳಬೇಕು. ತಾಲ್ಲೂಕಿನ ಪ್ರತಿ ಭಾಗದಲ್ಲಿ ಹೋಗಿ ಹೆಚ್ಚಿನ ಪರೀಕ್ಷೆಗಳನ್ನು ಕೈಗೊಂಡು ವರದಿ ಸಿದ್ಧಪಡಿಸಬೇಕು. ಪರೀಕ್ಷೆ ವೇಳೆಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ಅಂತಹ ಪ್ರದೇಶಗಳಲ್ಲಿ ‘ಹಾಟ್ಸ್ಪಾಟ್ ವಲಯ’ ಎಂದು ಗುರುತಿಸಿ, ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು’ ಎಂದು ತಿಳಿಸಿದರು.
‘ಆಶಾ ಕಾರ್ಯಕರ್ತೆಯರ ಮೂಲಕ ಸವದತ್ತಿ, ರಾಯಬಾಗ, ಹುಕ್ಕೇರಿ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಮನೆ– ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಒಂದು ವೇಳೆ ‘ಟಿಬಿ ಪಾಸಿಟಿವ್’ ಕಂಡುಬಂದಲ್ಲಿ ಅಂಥವರಿಗೆ ತ್ವರಿತವಾಗಿ ಚಿಕಿತ್ಸೆ ಒದಗಿಸಬೇಕು. ಅದೇ ರೀತಿಯಲ್ಲಿ ಅಗತ್ಯ ಸ್ಥಳಗಳಲ್ಲಿ ಸ್ಥಳೀಯವಾಗಿ ಕ್ಯಾಂಪ್ ಹಮ್ಮಿಕೊಂಡು ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಬೇಕು. ಇದಕ್ಕೆ ರಾಷ್ಟೀಯ ಆರೋಗ್ಯ ಅಭಿಯಾನದ (ಎನ್.ಎಚ್.ಎಂ) ಲೆಕ್ಕಾಧಿಕಾರಿಗಳು ಕ್ಯಾಂಪ್ ಹಮ್ಮಿಕೊಳ್ಳಲು ಅನುದಾನ ಬಿಡುಗಡೆಗೆ ಕ್ರಮ ವಹಿಸುವಂತೆ ವರದಿ ಸಿದ್ಧಪಡಿಬೇಕು’ ಎಂದೂ ಮೊಹಮ್ಮದ್ ರೋಷನ್ ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಈಶ್ವರ ಗಡಾದಿ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.