ಬೆಳಗಾವಿ: ಘನ ತ್ಯಾಜ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಪರಿಸರಕ್ಕೆ ಮಾರಕವಾದ ಪ್ಯಾಸ್ಟಿಕ್ ರ್ಯಾಪರ್ ತ್ಯಾಜ್ಯವನ್ನು ಮರುಬಳಕೆ ಮಾಡುವಂತೆ ತಯಾರಿಕರಿಗೆ ಆದೇಶಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯ ಬಸವ ಕಲಾ, ತಾಂತ್ರಿಕ ಹಾಗೂ ಮರುಬಳಕೆ ವಸ್ತುಸಂಗ್ರಹಾಲಯದ ಸದಸ್ಯರು ಶುಕ್ರವಾರ ಇಲ್ಲಿನ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.
‘ಅಪಾರ ಪ್ರಮಾಣದಲ್ಲಿ ಮಾರಾಟವಾಗುತ್ತಿರುವ ಚಿಪ್ಸ್, ಬಿಸ್ಕೆಟ್, ಇ–ವೇಸ್ಟ್, ಗುಟ್ಕಾ ಮೊದಲಾದವುಗಳ ಪ್ಯಾಸ್ಟಿಕ್ ರ್ಯಾಪರ್ ತ್ಯಾಜ್ಯ ಮರುಬಳಕೆ ಮಾಡುವಂತೆ ತಯಾರಿಕಾ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಇದು ಮಹತ್ವದ ಸಂಗತಿಯಾಗಿದೆ ಎಂದು ಹೇಳಿದರು.
‘ಪ್ಲಾಸ್ಟಿಕ್ ಲೋಟ, ಚಮಚ, ಪ್ಲೇಟ್ ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು. ಮಣ್ಣಿನ ಮೂರ್ತಿಕಾರರ ಕುಂದುಕೊರತೆಗಳ ನಿವಾರಣೆಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ವಿಷಕಾರಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜನೆ ಮಾಡದಂತೆ ನೋಡಿಕೊಳ್ಳಬೇಕು. ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಟ್ಟು ಹಾಕುವುದಕ್ಕೆ ಕಡಿವಾಣ ಹಾಕಬೇಕು. ಕೆರೆ, ಬಾವಿ ಮೊದಲಾದ ಜಲಮೂಲಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಸೇರದಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ವೀರಪ್ಪ ಅರಕೇರಿ, ಸೌರಭ್, ಶ್ರೀನಿಧಿ, ಲಕ್ಷ್ಮಣ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.