ADVERTISEMENT

ವೀರಭೂಮಿ ಲೋಕಾರ್ಪಣೆಗೆ ಸಿದ್ಧತೆ: ಸಚಿವ ಶಿವರಾಜ ತಂಗಡಗಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 4:10 IST
Last Updated 15 ಅಕ್ಟೋಬರ್ 2025, 4:10 IST
ಖಾನಾಪುರ ತಾಲ್ಲೂಕಿನ ನಂದಗಡದ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ‘ವೀರಭೂಮಿ’ಗೆ ಸಚಿವ ಶಿವರಾಜ ತಂಗಡಗಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ಖಾನಾಪುರ ತಾಲ್ಲೂಕಿನ ನಂದಗಡದ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ‘ವೀರಭೂಮಿ’ಗೆ ಸಚಿವ ಶಿವರಾಜ ತಂಗಡಗಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು   

Thangadagi Visit to Nandaghad

ಖಾನಾಪುರ: ತಾಲ್ಲೂಕಿನ ನಂದಗಡದಲ್ಲಿ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ‘ವೀರಭೂಮಿ’ಗೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ನಂದಗಡ ಮ್ಯೂಸಿಯಂ ವೀರಭೂಮಿ, ವಸ್ತು ಸಂಗ್ರಹಾಲಯ, ಮ್ಯೂಸಿಯಂ ಮುಖ್ಯದ್ವಾರ, ಸಂಗೊಳ್ಳಿ ರಾಯಣ್ಣ ಸ್ಮರಣೀಯ ಪ್ರತಿಮೆಗಳು, ಸಾರ್ವಜನಿಕ ಪ್ರವೇಶದ ಟಿಕೆಟ್ ಕೌಂಟರ್, ಅಲ್ಪೋಪಾಹಾರ ಗೃಹ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ, ಕಂಪೌಂಡ, ದೀಪಾಲಂಕಾರ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದರು.

ADVERTISEMENT

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ, ‘ಸದ್ಯ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಉದ್ಘಾಟನೆಗೊಳಿಸಿ ಇನ್ನೂ ₹28 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇನ್ನುಳಿದ ಕಾಮಗಾರಿಗಳ ಪ್ರಾರಂಭಿಸುವ ಕುರಿತು ಈಗಾಗಲೇ ಪ್ರಸ್ತಾವ ಸಿದ್ಧವಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಅನುಮೋದನೆ ಪಡೆದು ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು’ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ‘ದೇಶದಲ್ಲಿ ಉತ್ತಮ ಶಾಲೆಗಳಲ್ಲಿ ಸಂಗೊಳ್ಳಿಯ ಸೈನಿಕ ಶಾಲೆ ಕೂಡ ಒಂದಾಗಿದ್ದು, ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟದ ಶಾಲೆ ನಿರ್ಮಾಣ ಮಾಡಲಾಗಿದೆ. ಸೈನಿಕ ಶಾಲೆ ಸಂಗೊಳ್ಳಿ ಭಾಗದ ಸಾಕಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಶಾಲೆಯ ಪ್ರವೇಶಕ್ಕೆ ಸ್ಥಳೀಯ ಮತ್ತು ರಾಜ್ಯದ ಮಕ್ಕಳಿಗೆ ಮೊದಲ ಆದ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಪಠ್ಯ, ಪಠ್ಯೇತರ, ಎನ್.ಸಿ.ಸಿ ಸೇರಿದಂತೆ ಸಾಕಷ್ಟು ಚಟುವಟಿಕೆಗಳನ್ನು ಶಾಲೆಯಲ್ಲಿ ಹಮ್ಮಿಕೊಳ್ಳುತ್ತಿದೆ’ ಎಂದು ಹೇಳಿದರು.

‘ರಾಯಣ್ಣನ ಸ್ಮರಣೀಯ ಸ್ಥಳಗಳು ಪ್ರವಾಸಿ ಸ್ಥಳವಾಗಬೇಕು ಎಂಬ ಯೋಜನೆಯಿಂದ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಬರುವ ದಿನಗಳಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನ, ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ಆಯ್ಕೆಮಾಡಿ ಪ್ಯಾಕೇಜ್ ಮೂಲಕ ಪ್ರವಾಸಿಗರಿಗೆ ಬಸ್ ಸೌಲಭ್ಯ ಕಲ್ಪಿಸುವ ಯೋಜನೆಯಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ತಿಳಿಸಿದರು.

ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಅಶೋಕ ದಳವಾಯಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹರ್ಷ, ಖಾನಾಪುರ ತಹಶೀಲ್ದಾರ್ ದುಂಡಪ್ಪ ಕೋಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ರಾಯಣ್ಣನ ಶೌರ್ಯ ಭೂಮಿ ಸಂಗೊಳ್ಳಿಯಲ್ಲಿ ರಾಯಣ್ಣ ಜೀವನ ಚರಿತ್ರೆ ಸಾರುವ ಮೂರ್ತಿಗಳಿರುವ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗಿದ್ದು ಗಮನ ಸೆಳೆಯುತ್ತಿದೆ.
ಎಚ್.ಎಂ.ರೇವಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ

29ರಂದು ಸಿ.ಎಂ ಸಭೆಯಲ್ಲಿ ಚರ್ಚೆ

‘ಯೋಜನೆಗಳಲ್ಲಿ ಕೆಲವು ಬದಲಾವಣೆಯಾಗುವ ಸಾಧ್ಯತೆ ಇರುವುದರಿಂದ ಅಕ್ಟೋಬರ್ 29ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದು’ ಎಂದು ಸಚಿವ ತಂಗಡಗಿ ಹೇಳಿದರು.

‘ನಂದಗಡದ ರಾಯಣ್ಣ ಮೂರ್ತಿಯ ಕೆಳಗಡೆ ಕೆರೆ ಇರುವುದರಿಂದ ಕೆರೆಗೆ ಊರಿನ ಚರಂಡಿ ನೀರು ಬರುತ್ತಿದೆ. ಅದಕ್ಕೆ ತಡೆಗೋಡೆ ನಿರ್ಮಿಸಲು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ₹2 ಕೋಟಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ. ಈಗಾಗಲೇ ₹50 ಲಕ್ಷ ಅನುದಾನ ಕಾಯ್ದಿರಿಸಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.