ಬೆಳಗಾವಿ: ತಮ್ಮನ್ನು ‘ಡಿ’ ಗ್ರೂಪ್ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ಮಂಗಳವಾರ ಸುವರ್ಣ ವಿಧಾನಸೌಧ ಬಳಿಯ ಕೊಂಡಸಕೊಪ್ಪದಲ್ಲಿ ಪ್ರತಿಭಟನೆ ನಡೆಸಿದರು.
‘ಉತ್ತರ ಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನಲ್ಲಿ ಹಲವು ಬಾರಿ ಮುಷ್ಕರ ಹಾಗೂ ಪಾದಯಾತ್ರೆ ನಡೆಸಿದ್ದೇವೆ. 2013ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲೂ ಪ್ರತಿಭಟನೆ ಮಾಡಿದ್ದೆವು. ಆದರೂ ಸ್ಪಂದನೆ ದೊರೆತಿಲ್ಲ’ ಎಂದು ದೂರಿದರು.
‘ನಮಗೆ ಸಮಾನ ವೇತನ ನಿಗದಿಪಡಿಸದೇ ವಂಚಿಸಲಾಗಿದೆ. ದಿನದ 24 ಗಂಟೆಯೂ ಸರ್ಕಾರದ ಹಾಗೂ ಸಾರ್ವಜನಿಕರ ಕೆಲಸವನ್ನು ಮಾಡುತ್ತಿರುವ ನಮ್ಮನ್ನು ಸರ್ಕಾರವು ಗುಲಾಮರಂತೆ ನಡೆಸಿಕೊಳ್ಳುತ್ತಿದೆ’ ಎಂದು ದೂರಿದರು. ‘ನಮ್ಮನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಬೇಕು. ಸರ್ಕಾರದ ಇತರ ನೌಕರರಿಗೆ ಸಿಗುವಂಥ ಸೌಲಭ್ಯ, ಪಿಂಚಣಿ, ರಜೆ ಮೊದಲಾದ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಬಂದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಮಾತನಾಡಿ, ‘ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗ್ರಾಮ ಸಹಾಯಕರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಲು ಪ್ರಯತ್ನಗಳು ನಡೆದಿದ್ದವು. ಆದರೆ ನಂತರ ಹಂತ ಹಂತವಾಗಿ ವೇತನ ಏರಿಕೆ ಮಾಡಿದ್ದರಿಂದ ಬೇಡಿಕೆ ಹಾಗೆಯೇ ಉಳಿಯಿತು. ಈಗಿನ ಸಮ್ಮಿಶ್ರ ಸರ್ಕಾರದಲ್ಲಿ, ಬೇಡಿಕೆ ಈಡೇರಿಕೆ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.
ಅಸ್ವಸ್ಥಗೊಂಡ ಒಬ್ಬ ಗ್ರಾಮ ಸಹಾಯಕರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.
ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.