ADVERTISEMENT

ಚಿಕ್ಕೋಡಿಯಲ್ಲಿ ಪ್ರಯೋಗಾಲಯ ಸ್ಥಾಪನೆ: ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2020, 13:28 IST
Last Updated 25 ಮಾರ್ಚ್ 2020, 13:28 IST
ಚಿಕ್ಕೋಡಿ ತಾಲ್ಲೂಕಿನ ಇಟ್ನಾಳ ಗ್ರಾಮಸ್ಥರು ನಿರ್ಬಂಧ ವಿಧಿಸಿದ್ದಾರೆ.
ಚಿಕ್ಕೋಡಿ ತಾಲ್ಲೂಕಿನ ಇಟ್ನಾಳ ಗ್ರಾಮಸ್ಥರು ನಿರ್ಬಂಧ ವಿಧಿಸಿದ್ದಾರೆ.   

ಬೆಳಗಾವಿ: ನೆರೆಯಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣು ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುವುದರಿಂದ ರಾಜ್ಯದ ಗಡಿ ಭಾಗದಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳುವುದು ಅವಶ್ಯವಾಗಿದೆ. ಗಡಿ ಭಾಗದ ಜನರ ಅನುಕೂಲಕ್ಕಾಗಿ ಶೀಘ್ರದಲ್ಲೇ ಚಿಕ್ಕೋಡಿಯಲ್ಲಿ ಕೊರೊನಾ ವೈರಾಣು ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಚಿಕ್ಕೋಡಿಯಲ್ಲಿ ನಡೆದ ಉಪವಿಭಾಗದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೊನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸೂಚನೆಯಂತೆ 21 ದಿನ ಲಾಕ್ ಡೌನ್ ಅನುಷ್ಠಾನ ಮಾಡುವ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ADVERTISEMENT

ನಗರ ಪ್ರದೇಶದಲ್ಲಿ ಸಾಕಷ್ಟು ಜಾಗೃತಿ ಮೂಡಿದೆ. ಆದರೆ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಪಿಡಿಒಗಳು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕಠಿಣ ಕ್ರಮ ತೆಗೆದುಕೊಳ್ಳಬೇಕು.ಹೆಚ್ಚು ಜನರು ಒಂದೆಡೆ ಸೇರದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಎಸಿ ರವೀಂದ್ರ ಕರಲಿಂಗನ್ನವರ, ತಹಶಿಲ್ದಾರ್ ಎಸ್.ಎಸ್.ಸಂಪಗಾವಿ, ಡಾ.ರೋಹಿಣಿ ಕುಲಕರ್ಣಿ, ಡಾ.ವಿಠ್ಠಲ ಶಿಂಧೆ ಇದ್ದರು.

ಗ್ರಾಮಕ್ಕೆ ನಿರ್ಬಂಧ ವಿಧಿಸಿದ ಗ್ರಾಮಸ್ಥರು!

ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಬೇರೆಯವರು ತಮ್ಮ ಊರು ಪ್ರವೇಶಿಸದಂತೆ ತಡೆಯಲು ಚಿಕ್ಕೋಡಿ ತಾಲ್ಲೂಕಿನ ಇಟ್ನಾಳಗ್ರಾಮಸ್ಥರು ನಿರ್ಬಂಧ ವಿಧಿಸಿದ್ದಾರೆ.

ಗ್ರಾಮ ಸಂಪರ್ಕಿಸುವ ಮುಖ್ಯರಸ್ತೆಗೆ ಮುಳ್ಳು‌ ಕಂಟಿ,‌ ಕಲ್ಲು ಇಟ್ಟು ಪ್ರವೇಶ ನಿರ್ಬಂಧಿಸಿದ್ದಾರೆ. ವಿಶೇಷವಾಗಿ ಕೊರೊನಾ ಪೀಡಿತ ಮಹಾರಾಷ್ಟ್ರದಿಂದ ಬಂದವರಿಗೆ ಊರಿಗೆ ಪ್ರವೇಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.