ADVERTISEMENT

ತ್ಯಾಜ್ಯಗಳ ಮರುಬಳಕೆಗೆ ಒತ್ತು ಕೊಡಿ: ಪಿ.ಎಂ.ನರೇಂದ್ರಸ್ವಾಮಿ ಕರೆ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಕರೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 2:40 IST
Last Updated 5 ನವೆಂಬರ್ 2025, 2:40 IST
ಬೆಳಗಾವಿಯಲ್ಲಿ ಮಂಗಳವಾರ ನಡೆದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ತಡೆಗಟ್ಟುವ ಕುರಿತು ಪ್ರತಿಜ್ಞೆ ಸ್ವೀಕರಿಸಿದರು
ಬೆಳಗಾವಿಯಲ್ಲಿ ಮಂಗಳವಾರ ನಡೆದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ತಡೆಗಟ್ಟುವ ಕುರಿತು ಪ್ರತಿಜ್ಞೆ ಸ್ವೀಕರಿಸಿದರು   

ಬೆಳಗಾವಿ: ‘ಜಿಲ್ಲೆಯಲ್ಲಿ ಕಬ್ಬು ಪ್ರಮುಖ ಬೆಳೆಯಾಗಿದ್ದು, ಹೆಚ್ಚಿನ ಸಕ್ಕರೆ ಕಾರ್ಖಾನೆಗಳಿವೆ. ಕಾರ್ಖಾನೆಗಳು ಸೇರಿದಂತೆ ಎಲ್ಲ ಕೈಗಾರಿಕೆಗಳು ತ್ಯಾಜ್ಯಗಳ ಮರುಬಳಕೆಗೆ ಒತ್ತು ನೀಡಬೇಕು’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಜಿಲ್ಲಾಡಳಿತ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೈಗಾರಿಕೆಗಳಿಂದ ಹೊರಬರುತ್ತಿರುವ ರಾಸಾಯನಿಕಯುಕ್ತ ನೀರು, ಹೊಗೆಯಿಂದ ಜಲಮಾಲಿನ್ಯ ಮತ್ತು ವಾಯುಮಾಲಿನ್ಯ ಆಗುತ್ತಿದೆ. ಇದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ’ ಎಂದರು.

ADVERTISEMENT

‘ಕಬ್ಬಿನ ಸಿಪ್ಪೆ ಪರ್ಯಾಯ ಇಂಧನವಾಗಿದೆ. ಇದರಿಂದ ಏಕಬಳಕೆಯ ತಟ್ಟೆ, ಲೋಹ ತಯಾರಿಸಲಾಗುತ್ತಿದೆ. ಅಂತೆಯೇ ಬಗ್ಯಾಸ್‌ ಮತ್ತು ಎಥೆನಾಲ್ ಘಟಕದ ತ್ಯಾಜ್ಯವನ್ನು ಇಂಧನವಾಗಿ ಬಳಸಿಕೊಂಡು ಕೈಗಾರಿಕೆಗಳು ತಮಗೆ ಅಗತ್ಯವಿರುವ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುತ್ತಿವೆ. ಹೆಚ್ಚುವರಿ ವಿದ್ಯುತ್ ಮಾರಾಟ ಮಾಡುತ್ತಿವೆ’ ಎಂದು ತಿಳಿಸಿದರು.

ಪರಿಸರ ಸಂರಕ್ಷಣೆಗಾಗಿ ಶ್ರಮಿಸಿದ ಸಾಧಕರು, ಪೌರಕಾರ್ಮಿಕರು, ಪರಿಸರ ಸ್ನೇಹಿ ಶಾಲೆಗಳ ಮುಖ್ಯಶಿಕ್ಷಕರು ಹಾಗೂ ಸಂಘ–ಸಂಸ್ಥೆಯವರಿಗೆ ‘ಇಂದಿರಾ ಪ್ರಿಯದರ್ಶಿನಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹನುಮನ್ನವರ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪರಿಸರ ಅಧಿಕಾರಿ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಇದ್ದರು.

ಇ-ತ್ಯಾಜ್ಯ ಪ್ಲಾಸ್ಟಿಕ್ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್ ಬಳಕೆ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮ ವಹಿಸಬೇಕು
ಆಸಿಫ್ ಸೇಠ್ ಶಾಸಕ

‘ತಿಳಿವಳಿಕೆ ಮೂಡಿಸುವ ಕೆಲಸವಾಗಲಿ’

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ‘ಮಾಲಿನ್ಯ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸುವ ಕೆಲಸವಾಗಬೇಕು. ಅದರಲ್ಲೂ ತಾಲ್ಲೂಕುಮಟ್ಟದಲ್ಲಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮ ಏರ್ಪಡಿಸಬೇಕು. ಪರಿಸರ ಸಂರಕ್ಷಣೆಗಾಗಿ ಉತ್ತಮವಾಗಿ ಕೆಲಸ ಮಾಡಿದ ವ್ಯಕ್ತಿಗಳು ಸಂಘ–ಸಂಸ್ಥೆಗಳನ್ನು ಗುರುತಿಸಿ ಸನ್ಮಾನಿಸಬೇಕು’ ಎಂದು ಸಲಹೆ ನೀಡಿದರು. ‘ರಾಜ್ಯದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಯಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಕ್ರಮ ಆಯೋಜಿಸಿ ಯುವಜನರಿಗೆ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.