ಘಟಪ್ರಭಾ: ‘ಹಿಡಕಲ್ ಜಲಾಶಯದಿಂದ 15 ದಿನಗಳವರೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲೆಂದು ಹಂತ ಹಂತವಾಗಿ ಒಟ್ಟು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುವುದು’ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
‘ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಶನಿವಾರದಿಂದಲೇ ಜಲಾಶಯದಿಂದ ನೀರು ಬಿಡುಗಡೆ ಆಗಿದೆ. ಘಟಪ್ರಭಾ ಎಡದಂಡೆ ಕಾಲುವೆಗೆ 2,400 ಕ್ಯುಸೆಕ್, ಘಟಪ್ರಭಾ ಬಲದಂಡೆ ಕಾಲುವೆಗೆ 2ಸಾವಿರ ಕ್ಯುಸೆಕ್ ಮತ್ತು ಸಿಬಿಸಿ ಕಾಲುವೆಗೆ 550 ಕ್ಯುಸೆಕ್ ನೀರು ಹರಿಸಲಾಗಿದೆ. ಹದಿನೈದು ದಿನಗಳವರೆಗೆ ಬಿಡುಗಡೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
‘ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲ್ಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನವಶ್ಯವಾಗಿ ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲೆಂದು ಜಲಸಂಪನ್ಮೂಲ ಸಚಿವರು ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಚಿವರನ್ನು ರೈತರ ಪರವಾಗಿ ಅಭಿನಂದಿಸುತ್ತೇನೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.