ADVERTISEMENT

ಸತ್ಯ, ಅಹಿಂಸಾ ತತ್ವ ಗಾಂಧೀಜಿ ಕೊಡುಗೆ

ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಿರೇಮಠ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 8:14 IST
Last Updated 2 ಅಕ್ಟೋಬರ್ 2020, 8:14 IST
ಬೆಳಗಾವಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ವೀರಸೌಧದಲ್ಲಿರುವ ಪ್ರತಿಮೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಕ್ರವಾರ ಮಾಲಾರ್ಪಣೆ ಮಾಡಿದರು
ಬೆಳಗಾವಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ವೀರಸೌಧದಲ್ಲಿರುವ ಪ್ರತಿಮೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಕ್ರವಾರ ಮಾಲಾರ್ಪಣೆ ಮಾಡಿದರು   

ಬೆಳಗಾವಿ: ‘ಮಹಾತ್ಮ ಗಾಂಧೀಜಿ ಅವರು ನೀಡಿದ ಸತ್ಯ ಮತ್ತು ಅಹಿಂಸಾ ಮಾರ್ಗವು ವಿಶ್ವದಾದ್ಯಂತ ಎಲ್ಲ ಕಾಲಕ್ಕೂ ಪ್ರಸ್ತುತವಾಗಿದೆ. ಈ ತತ್ವವನ್ನು ನಾವು ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸಂಘದಿಂದ ಇಲ್ಲಿನ ಟಿಳಕವಾಡಿಯ ವೀರಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಅಹಿಂಸಾ ಹೋರಾಟಕ್ಕೆ ಸ್ಫೂರ್ತಿಯಾಗಿದ್ದ ಗಾಂಧೀಜಿ ಅವರ ಸಮಪಾಲು–ಸಮಬಾಳು ಎಂಬ ತತ್ವ ನಮ್ಮ ಸಂವಿಧಾನದ ಆಶಯವಾಗಿದೆ. ಆ ಪ್ರಕಾರವೇ ದೇಶ ನಡೆಯುತ್ತಿದೆ. ಅವರು ಕಂಡ ಸ್ವಚ್ಛ ಮತ್ತು ಆರೋಗ್ಯ ಭಾರತದ ಕನಸು ಸಾಕಾರಗೊಳಿಸುವ ಜವಾಬ್ದಾರಿ ಎಲ್ಲರದಾಗಿದೆ’ ಎಂದರು.

ADVERTISEMENT

‘ಶಾಸ್ತ್ರೀಜಿ ಅತ್ಯಂತ ಸರಳಜೀವಿಯಾಗಿದ್ದರು. ರೈಲು ದುರಂತವೊಂದು ನಡೆದಾಗ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮಾದರಿಯಾಗಿದ್ದರು’ ಎಂದು ಸ್ಮರಿಸಿದರು.

ಸಂಗೀತ ಶಿಕ್ಷಕ ವಿನಾಯಕ ಮೋರೆ ಹಾಗೂ ತಂಡದವರು ಭಜನೆಗಳನ್ನು ಪ್ರಸ್ತುತಪಡಿಸಿದರು. ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಸ್ವಾಗತಿಸಿದರು. ಸರ್ವಮಂಗಳಾ ಅರಳಿಮಟ್ಟಿ ನಿರೂಪಿಸಿದರು.

ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಪರಶುರಾಮ ನಂದಿಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಪಾಲಿಕೆಯ ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾಣಿಕರ, ಸಂಘದ ರಾಜೇಂದ್ರ ಕಲಘಟಗಿ, ಅರುಣ ಚಿಬತೆ, ಆಚಾರ್ಯ ಸುರೇಂದ್ರ ದೇಸಾಯಿ, ಶಿವಾಜಿರಾವ್ ಕದಂ, ಮಾರುತರಾವ್ ಲೋಹಾರ್, ವಿಜಯರಾವ್ ಶಿಂಗತೆ, ಡಾ.ಸವಿತಾ ಗುರವ, ನಮ್ರತಾ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.