ADVERTISEMENT

ಸಂತೋಷ್ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ: ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 13:45 IST
Last Updated 12 ಏಪ್ರಿಲ್ 2022, 13:45 IST
ಸಂತೋಷ್ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ: ಲಕ್ಷ್ಮಿ ಹೆಬ್ಬಾಳಕರ
ಸಂತೋಷ್ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ: ಲಕ್ಷ್ಮಿ ಹೆಬ್ಬಾಳಕರ   

ಬೆಳಗಾವಿ: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಅವರು ಶೇ 40ರಷ್ಟು ಕಮಿಷನ್ ಕೇಳಿರುವುದೆ ಕಾರಣ. ಹೀಗಾಗಿ, ಅವರ ರಾಜೀನಾಮೆ ಪಡೆದು ಕೂಡಲೇ ಬಂಧಿಸಬೇಕು’ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಒತ್ತಾಯಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಶೇ 40ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗೆ ಗುತ್ತಿಗೆದಾರರು ಪತ್ರ ಬರೆದು ಗಮನಸೆಳೆದಿರುವುದು ದೇಶದ ಇತಿಹಾಸದಲ್ಲಿ ಮೊದಲನೆಯದಾಗಿದೆ. ಸಚಿವ ಈಶ್ವರಪ್ಪ ಅವರ ಮೇಲೆ ಗಂಭೀರ ಆರೋಪ ಇದಾಗಿದೆ’ ಎಂದರು.

‘ಸಂತೋಷ್ ಕುಟುಂಬಕ್ಕೆ ಸರ್ಕಾರ ಸಹಾಯ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಸಂತೋಷ್ ನನ್ನ ಕ್ಷೇತ್ರದಲ್ಲಿ ಕಾರ್ಯಾದೇಶ ಇಲ್ಲದೆ ಕೆಲಸ ಮಾಡಿದ್ದಾರೆ. ಸಂಬಂಧಿಸಿದ ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ ಮಂಡೋಳ್ಕರ್ ಅವರನ್ನು ಬಂಧಿಸಬೇಕು. ಆಗ ಎಲ್ಲ ಸತ್ಯವೂ ಬಯಲಾಗುತ್ತದೆ. ಯಾರು ಕೆಲಸ ಮಾಡಲು ಸೂಚಿಸಿದ್ದರು, ಆಗ ಯಾರು ಅಧಿಕಾರದಲ್ಲಿದ್ದರು ಎನ್ನುವುದು ಗೊತ್ತಾಗುತ್ತದೆ’ ಎಂದರು.

‘ಈಶ್ವರಪ್ಪ ಸೇರಿದಂತೆ ಬಿಜೆಪಿಯವರಿಗೆ ಜನರ ಬಗ್ಗೆ ಕಳಕಳಿ ಇಲ್ಲ. ಸಂತೋಷ್ ಹಿಂಡಲಗಾ ಗ್ರಾಮದಲ್ಲಿ ಕೆಲಸ ಮಾಡಿದ್ದು ನಿಜ. ಅವರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.