ಬೆಳಗಾವಿ: ‘ಮಹದಾಯಿ ನದಿಯಲ್ಲಿನ ನಮ್ಮ ಪಾಲಿನ ನೀರು ಉಪಯೋಗಿಸಿಕೊಳ್ಳಲು ಬದ್ಧವಿದ್ದೇವೆ. ಇದಕ್ಕಾಗಿ ಯೋಜನೆ ಸಿದ್ಧಪಡಿಸುತ್ತಿದ್ದೇವೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಇತ್ಯರ್ಥವಾದ ಮರುದಿನವೇ ಕೆಲಸ ಆರಂಭಿಸುತ್ತೇವೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. 13.4 ಟಿಎಂಸಿ ಅಡಿ ನೀರು ನಮಗೆ ಹಂಚಿಕೆಯಾಗಿದೆ. ಇದರಲ್ಲಿ 5 ಟಿಎಂಸಿ ನೀರು ಕುಡಿಯುವ ನೀರಿಗೆ ಬಳಕೆ ಮಾಡಿಕೊಳ್ಳಲಾಗುವುದು. 8 ಟಿಎಂಸಿಯನ್ನು ವಿದ್ಯುತ್ ಉತ್ಪಾದನೆಗೆ ನದಿಗೆ ಬಿಡಲಾಗುತ್ತದೆ. 2015ರಲ್ಲಿ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಅದನ್ನೇ ಅಂತಿಮ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದೇವೆ’ ಎಂದರು.
‘ಗೋವಾ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ನ್ಯಾಯಾಲಯದ ಮೆಟ್ಟಿಲೇರಿವೆ. ನಾವೂ ಅರ್ಜಿ ಸಲ್ಲಿಸಿದ್ದೇವೆ’ ಎಂದರು.
‘ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬ ಆಗ್ರಹದ ಬಗ್ಗೆ ಸಾಧಕ– ಬಾಧಕಗಳ ಬಗ್ಗೆ ಚರ್ಚಿಸಬೇಕಾಗುತ್ತದೆ. ಪ್ರತಿಯೊಂದು ಜಿಲ್ಲೆಯವರೂ ಒಂದೊಂದು ಬೇಡಿಕೆ ಇಟ್ಟರೆ ಕಷ್ಟವಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.
‘12ನೇ ಶತಮಾನದಲ್ಲಿ ಶರಣರು ಕ್ರಾಂತಿ ಮಾಡಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.