ADVERTISEMENT

377 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಸಾಧ್ಯತೆ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 31 ಮೇ 2021, 11:32 IST
Last Updated 31 ಮೇ 2021, 11:32 IST
ಸಚಿವ ಗೋವಿಂದ ಕಾರಜೋಳ
ಸಚಿವ ಗೋವಿಂದ ಕಾರಜೋಳ   

ಬೆಳಗಾವಿ: ‘ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭಗೊಳ್ಳಲಿದ್ದು, ನದಿ ತೀರದ 377 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಇಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ತುರ್ತು ಸಂದರ್ಭಗಳಲ್ಲಿ ಈ ಗ್ರಾಮದ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಮುನ್ನಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಸೂಚಿಸಿದರು.

‘ಈ ಬಾರಿ ಕೂಡ ಕೋವಿಡ್ ಇರುವುದರಿಂದ ಹಿಂದಿಗಿಂತಲೂ ಹೆಚ್ಚಿನ ಸಂಖ್ಯೆಯ ಕಾಳಜಿ ಕೇಂದ್ರಗಳನ್ನು ಆರಂಭಿಸಬೇಕು. ಆಶ್ರಯ ಪಡೆಯುವವರಿಗೆ ಊಟೋಪಹಾರ, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅದೇ ರೀತಿ ಜಾನುವಾರುಗೂ ರಕ್ಷಣೆ ನೀಡಬೇಕು. ಮೇವು ಮತ್ತು ಲಸಿಕೆ ದಾಸ್ತಾನು ಇಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ನೆರೆಯ ಮಹಾರಾಷ್ಟ್ರದ ಜಲಾಶಯಗಳ ನೀರಿನ ಮಟ್ಟದ ಮೇಲೆ ನಿರಂತರ ನಿಗಾ ವಹಿಸಬೇಕು. ಉಭಯ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನೀರಿನ ಮಟ್ಟ ಹಾಗೂ ನೀರು ಬಿಡುಗಡೆ ಕುರಿತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು’ ಎಂದರು.

‘ಪ್ರವಾಹ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಲಿದೆ.‌ ಆದ್ದರಿಂದ ಮುಂಚಿತವಾಗಿಯೇ ಟಿಸಿ, ಕಂಡಕ್ಟರ್ (ವಿದ್ಯುತ್ ವಾಹಕ), ವಿದ್ಯುತ್ ಕಂಬಗಳು, ತಂತಿ ಮತ್ತಿತರ ಪರಿಕರಗಳ ದಾಸ್ತಾನು ಇಟ್ಟುಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಪ್ರವಾಹ ನಿರ್ವಹಣೆಗೆ ಪೂರ್ವ ಸಿದ್ಧತೆಗಳ ನಡೆದಿದೆ. ಪ್ರವಾಹದಿಂದ ಬಾಧಿತಗೊಳ್ಳಬಹುದಾದ 377 ಗ್ರಾಮಗಳ ಜನರ ರಕ್ಷಣೆ ಮತ್ತು ತಾತ್ಕಾಲಿಕ ಪುನರ್ವಸತಿಗೆ 500 ಕಾಳಜಿ ಕೇಂದ್ರಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.