ADVERTISEMENT

ರಮೇಶ ಜಾರಕಿಹೊಳಿ ಎಲ್ಲಿದ್ದಾರೆ? ಗೊಂದಲಕ್ಕೆ ಕಾರಣವಾದ ಗುಸುಗುಸು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 15:34 IST
Last Updated 5 ಏಪ್ರಿಲ್ 2021, 15:34 IST
ಶಾಸಕ ರಮೇಶ ಜಾರಕಿಹೊಳಿ
ಶಾಸಕ ರಮೇಶ ಜಾರಕಿಹೊಳಿ   

ಬೆಳಗಾವಿ: ‘ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕದ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ’ ಎಂದು ಇಲ್ಲಿನ ವಕೀಲ ಚಂದನ ಗಿಡ್ಡನವರ ಆರೋಪಿಸಿದ್ದರಿಂದಾಗಿ ಗೊಂದಲ ಉಂಟಾಗಿತ್ತು. ಅವರೊಂದಿಗೆ ಆಸ್ಪತ್ರೆ ಆವರಣದಲ್ಲಿ ರಮೇಶ ಬೆಂಬಲಿಗರು ಗಲಾಟೆ ನಡೆಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

‘ಕೋವಿಡ್–19 ಕಾರಣದಿಂದ ರಮೇಶ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ವೈದ್ಯರು ಸೋಮವಾರ ಬೆಳಿಗ್ಗೆ ಪತ್ರಕರ್ತರಿಗೆ ತಿಳಿಸಿದ್ದರು. ಆಸ್ಪತ್ರೆಗೆ ತೆರಳಿದ್ದ ವಕೀಲ ಚಂದನ ಗಿಡ್ಡನವರ, ‘ಶಾಸಕರು ಇಲ್ಲಿ ಚಿಕಿತ್ಸೆಗೆ ದಾಖಲಾಗಿಲ್ಲ’ ಎಂದು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು ಎನ್ನಲಾಗುತ್ತಿದೆ. ಆ ವಿಡಿಯೊ ಅನ್ನು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ತಮ್ಮ ಫೇಸ್‍ಬುಕ್‍ನಲ್ಲಿ ಶೇರ್ ಮಾಡಿದ್ದರು. ‘ಅತ್ಯಾಚಾರ ಪ್ರಕರಣದ ಆರೋಪಿ, ಕೋವಿಡ್ ಸೋಂಕಿತ ಯಾವ ಮಂಚದ ಮೇಲೂ ಕಾಣುತ್ತಿಲ್ಲ’ ಎಂದು ಪೋಸ್ಟ್‌ ಹಾಕಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು ಹಾಗೂ ಗುಸುಗುಸುಗಳಿಗೂ ಕಾರಣವಾಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಬಂದ ರಮೇಶ ಬೆಂಬಲಿಗರು ಗಿಡ್ಡನವರ ಅವರನ್ನು ತರಾಟೆಗೆ ತೆಗೆದುಕೊಂಡರು. ಅನವಶ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದೀರೇಕೆ ಎಂದು ಮುಗಿಬಿದ್ದರು. ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತ ತಲುಪಿತ್ತು.

ADVERTISEMENT

ಬಳಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ರಮೇಶ ಜಾರಕಿಹೊಳಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಣ್ಣ ವಿಡಿಯೊ ಬಿಡುಗಡೆ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.