ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ‘ದೇವರ ದಯೆಯಿಂದ ಸಂಪೂರ್ಣ ಗುಣವಾಗಿದ್ದೇನೆ. ವೈದ್ಯರು ಆರು ವಾರ ವಿಶ್ರಾಂತಿ ಹೇಳಿದ್ದಾರೆ. ಇನ್ನೆರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ತಮ್ಮ ಜನ್ಮದಿನದ ಅಂಗವಾಗಿ ನಗರದ ಗೃಹಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಕಳೆದ ಒಂದು ತಿಂಗಳು ತುಂಬ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ಬಹಳ ನೆನಪಿಸಿಕೊಂಡೆ. 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದವಳಿಗೆ ಹೀಗೆ ಏಕಾಏಕಿ ಮನೆಯಲ್ಲಿ ಕುಳಿತುಕೊಳ್ಳುವುದು ಕಷ್ಟ. ಸಾಧ್ಯವಾದಷ್ಟು ಜನರಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದೇನೆ’ ಎಂದರು.
‘ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ‘ಗೃಹಲಕ್ಷ್ಮೀ’ ಯೋಜನೆ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲ್ಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದೆ. ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ’ ಎಂದೂ ಹೇಳಿದರು.
‘ಮೈಕ್ರೊ ಫೈನಾನ್ಸ್ ಕಿರುಕುಳ ಆರು ತಿಂಗಳ ಹಿಂದೆಯೇ ತಿಳಿದಿತ್ತು. ಹೊರಗಿನ ವ್ಯಕ್ತಿಗಳು ಬಂದು ಜಿಲ್ಲೆಯಲ್ಲಿ ಮೈಕ್ರೊ ಫೈನಾನ್ಸ್ ನಡೆಸುತ್ತಿದ್ದಾರೆ, ಎಚ್ಚರವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಸದ್ಯ ಜಿಲ್ಲೆಯ 20 ಸಾವಿರ ಮಹಿಳೆಯರು ಇದರ ವಿಷ ವರ್ತುಲದಲ್ಲಿ ಸಿಲುಕಿದ್ದಾರೆ. ಸಾಲ ವಸೂಲಿಗೆ ಯಾರಿಗೂ ತೊಂದರೆ ಕೊಡದಂತೆ ಎಚ್ಚರಿಕೆ ನೀಡಲಾಗಿದೆ. ಮಹಿಳೆಯರು ಎದೆಗುಂದಬಾರದು’ ಎಂದು ಪ್ರಸ್ನೆಯೊಂದಕ್ಕೆ ಉತ್ತರಿಸಿದರು.
ಇದೇ ವೇಳೆ ಅವರು ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.