ADVERTISEMENT

ಬೆಳಗಾವಿ: ಫೆ.8ರಿಂದ ಕರ್ನಾಟಕ ಕುಸ್ತಿ ಹಬ್ಬ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 13:26 IST
Last Updated 5 ಜನವರಿ 2019, 13:26 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ    

ಬೆಳಗಾವಿ: ಕರ್ನಾಟಕ ಕುಸ್ತಿ ಹಬ್ಬ ಫೆಬ್ರವರಿ 8ರಿಂದ ಮೂರು ದಿನಗಳ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಕುಸ್ತಿ ಹಬ್ಬ ಏರ್ಪಡಿಸುವ ಕುರಿತು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಸ್ತಿ ಹಬ್ಬ ಏರ್ಪಡಿಸಲು ಯುಜನ ಸೇವೆ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ₹ 2 ಕೋಟಿ ಅನುದಾನ ನಿಗದಿಪಡಿಸಲಾಗಿದ್ದು, ಈಗಾಗಲೇ ₹ 1 ಕೋಟಿ ಬಿಡುಗಡೆಯಾಗಿದೆ. ಈ ಅನುದಾನವನ್ನು ಬಳಸಿಕೊಂಡು ಕುಸ್ತಿ ಹಬ್ಬವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಅಂತರರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಕುಸ್ತಿ ಪಟುಗಳನ್ನು ಆಹ್ವಾನಿಸಿ, ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ರಾಜ್ಯದ ಕುಸ್ತಿ ಪಟುಗಳಿಗೆ ಕಲಿಯುವ ಅವಕಾಶಗಳನ್ನು ಒದಗಿಸಬೇಕು. ಕುಸ್ತಿ ಹಬ್ಬದಲ್ಲಿ ಸ್ಥಳೀಯ ಕುಸ್ತಿಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ರಾಜ್ಯದಾದ್ಯಂತ ಸೂಕ್ತ ಪ್ರಚಾರ ಕೈಗೊಳ್ಳಬೇಕು ಎಂದು ಹೇಳಿದರು.

ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ದೂರದಿಂದ ಆಗಮಿಸುವ ಕುಸ್ತಿಪಟುಗಳು ಹಾಗೂ ತೀರ್ಪುಗಾರರಿಗೆ ಸೂಕ್ತ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸಬೇಕು. ಸ್ಪರ್ಧಾಳುಗಳ ಊಟ, ವಸತಿಗೆ ಸಂಬಂಧಿಸಿದಂತೆ ಯಾವುದೇ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ತಿಳಿಸಿದರು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ಎಚ್. ಮತ್ತು ಸೀಬಿರಂಗಯ್ಯ ಅವರು ಮಾಹಿತಿ ನೀಡಿದರು.

ಕುಸ್ತಿ ಹಬ್ಬ ಆಯೋಜನೆ ಹಾಗೂ ವಿವಿಧ ವಿಭಾಗದ ಸ್ಪರ್ಧೆಗಳ ಕುರಿತು ಅಂತರಾಷ್ಟ್ರೀಯ ಕುಸ್ತಿಪಟು ಮತ್ತು ಕರ್ನಾಟಕ ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘಧ ಅಧ್ಯಕ್ಷ ರತನಕುಮಾರ್ ಮಠಪತಿ ಅವರು ಮಾತನಾಡಿದರು.

ಸಂಸದ ಪ್ರಕಾಶ ಹುಕ್ಕೇರಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಅಭಯ ಪಾಟೀಲ, ಅನಿಲ ಬೆನಕೆ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಪೊಲೀಸ್ ಆಯುಕ್ತ ಡಿ.ಸಿ.ರಾಜಪ್ಪ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್‌. ರಾಮಚಂದ್ರನ್ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.