
ಚಿಕ್ಕೋಡಿ:ಮಾ.1 ರಿಂದ 6ರವರೆಗೆ ಯಡೂರ ವೀರಭದ್ರ-ಕಲ್ಯಾಣ ಮಹೋತ್ಸವ, ದೇವಾಲಯ ಜೀರ್ಣೋದ್ಧಾರ, ಮಹಾಕುಂಭಮೇಳ ಹಾಗೂ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಲಿವೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಹೇಳಿದರು.
ತಾಲ್ಲೂಕಿನ ಯಡೂರ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳ ಪೂರ್ವಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡುತ್ತಾ, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಯವರಿಂದ ಯಡೂರ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿ ಹೊಂದಿದ್ದು, ಮುಂದಿನ ದಿನಗಳಲ್ಲಿ ಯಡೂರ ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭವಾಗಲಿದೆ. ಬರುವ ಮಾರ್ಚ್ ತಿಂಗಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ವೈಭವಯುತವಾಗಿ ಮಾಡಲು ನಿರ್ಧರಿಸಲಾಗಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಅವರ ಮಾರ್ಗದರ್ಶನದಲ್ಲಿ ಪೂರ್ವ ಸಿದ್ಧತೆ ಕೆಲಸಗಳು ಮುಕ್ತಾಯದ ಹಂತದಲ್ಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪ್ರಭಾಕ ಕೋರೆ ಅವರನ್ನು ಪೂಜ್ಯರು ಸನ್ಮಾನಿಸಿ ಗೌರವಿಸಿದರು.
ಶ್ರೀಶೈಲ-ಯಡೂರ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದ ಸಭೆಯಲ್ಲಿ ವಿನೋದ ಕಾಗೆ, ಅನಿಲ ಪಾಟೀಲ, ರವಿ ಮಿರ್ಜೆ, ಮಹೇಶ ಕಾಗವಾಡೆ, ರಂಜಿತ ಶಿರಸೆಟ, ಪಾಂಡು ಮಾನೆ, ರಮೇಶ ಪಾಟೀಲ, ರಾಕೇಶ ಚಿಂಚಣೆ ಮುಂತಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.