ADVERTISEMENT

ಯಲ್ಲಮ್ಮನ ಸನ್ನಿಧಿಯಲ್ಲಿ ಹುಣ್ಣಿಮೆಯ ಸಂಭ್ರಮ: ಹರಿದುಬಂದ ಭಕ್ತಸಾಗರ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 21:10 IST
Last Updated 1 ಫೆಬ್ರುವರಿ 2026, 21:10 IST
ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಭಾನುವಾರ ನಡೆದ ಜಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು
ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಭಾನುವಾರ ನಡೆದ ಜಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು   

ಉಗರಗೋಳ (ಬೆಳಗಾವಿ ಜಿಲ್ಲೆ): ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಜಾತ್ರೆ ಸಂಭ್ರಮ ಮನೆಮಾಡಿತು. ದೇಶದ ವಿವಿಧ ರಾಜ್ಯಗಳಿಂದ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ಶ್ರದ್ಧೆಯಿಂದ ಯಲ್ಲಮ್ಮ ದೇವಿಗೆ ಪೂಜೆ ಸಲ್ಲಿಸಿದರು. 

ಜಾತ್ರೆಗೂ ಎರಡು ದಿನ ಮುಂಚೆಯಿಂದಲೇ ಗುಡ್ಡಕ್ಕೆ ಭಕ್ತರು ಹರಿದು ಬರಲಾಂಭಿಸಿದ್ದರು. ಶನಿವಾರ ರಾತ್ರಿ ಹೊತ್ತಿಗೆ ಇಡೀ ಗುಡ್ಡದ ಪರಿಸರ ಭಕ್ತರಿಂದ ಕಿಕ್ಕಿರಿದು ತುಂಬಿತ್ತು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ...’ ಎಂಬ ಜೈಕಾರ ಇಡೀ ಗುಡ್ಡದಲ್ಲಿ ಪ್ರತಿಧ್ವನಿಸಿತು. ಭಾನುವಾರ ಮಧ್ಯರಾತ್ರಿಯಿಂದಲೇ ದೇವಿ ದರ್ಶನಕ್ಕಾಗಿ ಭಕ್ತರಿಗೆ ಅವಕಾಶ ಮಾಡಿಕೊಡಲಾಯಿತು.

ರಸ್ತೆಬದಿ ಒಲೆ ಹೂಡಿದ ಭಕ್ತರು, ವಿವಿಧ ಖಾದ್ಯ ಸಿದ್ಧಪಡಿಸಿ ದೇವಿಗೆ ಪರಡಿ ತುಂಬಿದರು. ಜೋಗತಿಯರ ಚೌಡಕಿ ನಿನಾದ ಕಣ್ಮನಸೆಳೆಯಿತು. ವಿವಿಧ ಕಡೆಗಳಿಂದ ಬಂದಿದ್ದ ಕಲಾತಂಡಗಳು ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು.

ADVERTISEMENT

ಯಲ್ಲಮ್ಮ ದೇವಿ ದೇವಸ್ಥಾನ ಬಳಿಯ ಎಣ್ಣೆ ಹೊಂಡದಲ್ಲಿ ಪುರುಷರು ಹಾಗೂ ಮಹಿಳೆಯರ ಸ್ನಾನಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಸ್ನಾನಗೃಹಗಳಲ್ಲಿ ಬಿಸಿನೀರಿನ ವ್ಯವಸ್ಥೆ ಇತ್ತು.

ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳು ಜನರಿಂದ ಗಿಜಿಗುಡುತ್ತಿದ್ದವು. ಜಾತ್ರೆಯ ಪ್ರತಿ ಚಟುವಟಿಕೆ ಮೇಲೆ ನಿಗಾ ವಹಿಸಲು ಡ್ರೋನ್ ಕ್ಯಾಮೆರಾ ಬಳಸಲಾಗಿದೆ. ಯಲ್ಲಮ್ಮನಗುಡ್ಡದಿಂದ ಸವದತ್ತಿ, ಜೋಗುಳಬಾವಿ ಮಾರ್ಗದಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಅಂಗವಾಗಿ ರೇಣುಕಾದೇವಿ ದೇವಸ್ಥಾನ ಆವರಣದಲ್ಲಿನ ಅಪಾರ ಸಂಖ್ಯೆಯ ಭಕ್ತರು ಸೇರಿದರು 

ಮಹಾಶಿವರಾತ್ರಿಯವರೆಗೂ ಈ ಜಾತ್ರೆ ನಡೆಯಲಿದ್ದು ಗುಡ್ಡಕ್ಕೆ ಬರುವ ಭಕ್ತರಿಗೆ ಯಾವ ತೊಂದರೆ ಆಗದಂತೆ ಸೌಕರ್ಯ ಕಲ್ಪಿಸಲಾಗುವುದು.
– ಸಿದ್ದು ಹುಲ್ಲೋಳಿ, ಕಾರ್ಯದರ್ಶಿ – ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ

ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಜಾತ್ರೆಯ ಅಂಗವಾಗಿ ಸೇರಿದ ಅ‍ಪಾರ ಸಂಖ್ಯಯ ಭಕ್ತರು ಜೋಗುಳಬಾವಿ ನೀರಲ್ಲಿ ಮಿಂದೆದ್ದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.