ADVERTISEMENT

ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ, ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 5:24 IST
Last Updated 11 ಸೆಪ್ಟೆಂಬರ್ 2022, 5:24 IST
ಅರ್ಜುನಗೌಡ ಪಾಟೀಲ
ಅರ್ಜುನಗೌಡ ಪಾಟೀಲ   

ಯರಗಟ್ಟಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಶನಿವಾರ ರಾತ್ರಿ ಗಣೇಶ ವಿಸರ್ಜನೆ ‌ವೇಳೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಉಂಟಾಗಿ, ಯುವಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕಾನೂನು ಸಂಘರ್ಷಕ್ಕೆ ಒಳಪಟ್ಟ ಒಬ್ಬ ಬಾಲಕನನ್ನು ರಕ್ಷಣೆ ಮಾಡಲಾಗಿದೆ.

ಮುಗಳಿಹಾಳ ಗ್ರಾಮದ ಅರ್ಜುನಗೌಡ ಪಾಟೀಲ (21) ಕೊಲೆಯಾದವರು. ಉದಯ ಭಂದ್ರೋಳಿ (21), ಸುಭಾಷ ಸೋಲಣ್ಣವರ (21), ವಿಠ್ಠಲ ಮೀಸಿ (20) ಬಂಧಿತ ಆರೋಪಿಗಳು. ಗುಂಪಿನಲ್ಲಿದ್ದ 16 ವರ್ಷದ ಬಾಲಕನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ಕೊಲೆಯಾದವ ಹಾಗೂ ಆರೋಪಿಗಳು ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಈ ಕೊಲೆಗೆ ಹಳೆಯ ದ್ವೇಷ ಕಾರಣ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಜಗಳ ನಡೆಯಿತು. ವಿಕೋಪಕ್ಕೆ ಹೋದಾಗ ಒಂದು ಗುಂಪಿನವರು ಇನ್ನೊಂದು ಗುಂಪಿನ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿದರು. ಅರ್ಜುನಗೌಡ ಎದೆಯ ಎಡಭಾಗಕ್ಕೆ ಚಾಕು ಇರಿದಿದ್ದರಿಂದ ಸ್ಥಳದಲ್ಲೇ ಅಸುನೀಗಿದರು ಎಂದು ತಿಳಿಸಿದ್ದಾರೆ.

ADVERTISEMENT

ರಾತ್ರಿಯೇ ಸ್ಥಳಕ್ಕೆ ಧಾವಿಸಿದ ಮುರಗೋಡ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಗ್ರಾಮದ ಇನ್ನೂ ಕೆಲವು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.