ಬೆಳಗಾವಿ: ‘ನೆರೆಯ ಮಹಾರಾಷ್ಟ್ರದ ಕಾಲೇಜುಗಳಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳುವ ರಾಜ್ಯದ ವಿದ್ಯಾರ್ಥಿಗಳಿಗೆ ‘ಬಾರ್ಡರ್ ಸರ್ಟಿಫಿಕೇಟ್’ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು’ ಎಂದು ಆಗ್ರಹಿಸಿ ಸದಸ್ಯೆ ಸುಮಿತ್ರಾ ಉಗಳೆ ಸದನದ ಬಾವಿಗಿಳಿದು ಧರಣಿ ನಡೆಸಿದರು.
ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
‘ಗಡಿ ಭಾಗದ ವಿದ್ಯಾರ್ಥಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರ ಎರಡೂ ರಾಜ್ಯಗಳಲ್ಲಿ ಶಿಕ್ಷಣ ಪಡೆಯುತ್ತಾರೆ. ಮಹಾರಾಷ್ಟ್ರಕ್ಕೆ ಹೋಗುವವರು ಗಡಿ ಪ್ರಮಾಣಪತ್ರ ಸಲ್ಲಿಸಬೇಕು. ಆದರೆ, ನಿಪ್ಪಾಣಿ ತಹಶೀಲ್ದಾರ್ ಮಹಾರಾಷ್ಟ್ರಕ್ಕೆ ವ್ಯಾಸಂಗಕ್ಕೆ ಹೋಗುವ ಇಲ್ಲಿನ ವಿದ್ಯಾರ್ಥಿಗಳಿಗೆ ಬಾರ್ಡರ್ ಸರ್ಟಿಫಿಕೇಟ್ ಕೊಡುತ್ತಿಲ್ಲ. ಸಮಸ್ಯೆ ಬಗೆಹರಿಸುವವರೆಗೆ ಧರಣಿ ಮುಂದುವರಿಸುತ್ತೇನೆ’ ಎಂದು ಪಟ್ಟುಹಿಡಿದರು. ಅವರಿಗೆ ಸದಸ್ಯೆ ಸರಸ್ವತಿ ಪಾಟೀಲ ಬೆಂಬಲ ನೀಡಿದರು.
ಸಿಇಒ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ‘ವ್ಯಾಸಂಗ ಮಾಡಲು ಹೊರ ರಾಜ್ಯಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಗಡಿ ಪ್ರಮಾಣಪತ್ರ ನೀಡುವಂತೆ ತಹಶೀಲ್ದಾರ್ಗೆ ಸೂಚಿಸಲಾಗುವುದು. ಜಿಲ್ಲಾಧಿಕಾರಿಯನ್ನೂ ಕೋರಲಾಗುವುದು’ ಎಂದು ಭರವಸ ನೀಡಿದರು. ಬಳಿಕ ಸದಸ್ಯೆ ಧರಣಿ ಅಂತ್ಯಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.