ADVERTISEMENT

ಅಂಗನವಾಡಿ: ಪ್ರತಿಭಟನೆ ನಿಷೇಧಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2011, 19:35 IST
Last Updated 15 ಫೆಬ್ರುವರಿ 2011, 19:35 IST

ಬೆಂಗಳೂರು:  ಅಂಗನವಾಡಿ ನೌಕರರು ಪ್ರತಿಭಟನೆ ನಡೆಸದಂತೆ ನಿಷೇಧ ಹೇರಿರುವ ಸರ್ಕಾರದ ತೀರ್ಮಾನವನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಸದಸ್ಯರು ನಗರದ ಬನಪ್ಪ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ನೌಕರರ ಗೌರವಧನವನ್ನು ಕಡಿತಗೊಳಿಸುತ್ತಿರುವುದು ಖಂಡನೀಯ. ಸರ್ಕಾರ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಲು ಹೊರಟಿದೆ ಎಂದು ಪ್ರತಿಭಟನಾಕಾರರು ದೂರಿದರು.

ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಕಾರ್ಯಕರ್ತೆಯರನ್ನು ‘ಸಿ’ ಮತ್ತು ಸಹಾಯಕಿಯರನ್ನು ‘ಡಿ’ ಗುಂಪಿನ ನೌಕರರೆಂದು ಪರಿಗಣಿಸಬೇಕು. ಕಾರ್ಯಕರ್ತೆಯರಿಗೆ 12 ಸಾವಿರ ಮತ್ತು ಸಹಾಯಕಿಯರಿಗೆ 8 ಸಾವಿರ ರೂಪಾಯಿ ವೇತನವನ್ನು ನಿಗದಿಪಡಿಸಬೇಕು. ನಿವೃತ್ತಿ ವಯಸ್ಸನ್ನು 60 ವರ್ಷಗಳಿಗೆ ಸೀಮಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

60 ವರ್ಷ ದಾಟಿದ ಕಾರ್ಯಕರ್ತೆಯರಿಗೆ ಒಂದು ಲಕ್ಷ ರೂಪಾಯಿ, ಸಹಾಯಕಿಯರಿಗೆ ರೂ. 50 ಸಾವಿರ  ಆರ್ಥಿಕ ಪರಿಹಾರವನ್ನು ನೀಡಬೇಕು. ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನೂ ಅಂಗನವಾಡಿ ನೌಕರರಿಗೂ ವಿಸ್ತರಿಸಬೇಕು. ಕೆಲಸದ ಅವಧಿಯನ್ನು ಸಂಜೆ 4ರವರೆಗೆ ವಿಸ್ತರಿಸಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮಶೇಖರ್ ಯಾದಗಿರಿ, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಜ್ಯ ಸಮಿತಿ ಸದಸ್ಯೆ ಪ್ರತಿಭಾ ಕುಮಾರಿ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್‌ನ ರಾಜ್ಯ ಘಟಕದ ಅಧ್ಯಕ್ಷ ಕೆ.ರಾಧಾಕೃಷ್ಣ  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.