ADVERTISEMENT

ಅಂಬೇಡ್ಕರ್ ಆದರ್ಶ ಮೈಗೂಡಿಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ಯಲಹಂಕ: ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತರು, ಹಿಂದುಳಿದ ಜನರ ಪರವಾಗಿ ನಡೆಸಿದ ಹೋರಾಟ, ರಚಿಸಿದ ಸಂವಿಧಾನದ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ರವಿ ಅವರು ಹೇಳಿದರು.

ಜಕ್ಕೂರು ವಾರ್ಡ್ ವ್ಯಾಪ್ತಿಯ ಬಸವಲಿಂಗಪ್ಪ ನಗರದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಬಡಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸಂಘದ ಸದಸ್ಯರು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಬಿಬಿಎಂಪಿ ಸದಸ್ಯ ಕೆ.ಎ.ಮುನೀಂದ್ರ ಕುಮಾರ್ ಮಾತನಾಡಿ, ಬಸವಲಿಂಗಪ್ಪ ನಗರದ ಅಭಿವೃದ್ಧಿಗಾಗಿ ಬಿಬಿಎಂಪಿ ವತಿಯಿಂದ 1.20 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಏಪ್ರಿಲ್‌ನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ.ನಾಗರಾಜ್ ಮಾತನಾಡಿದರು. ಸಮಿತಿಯ ಜಿಲ್ಲಾ ಸಂಘಟನಾ ಸಂಯೋಜಕ ಬಿ.ಶ್ರೀನಿವಾಸ್, ತಾಲ್ಲೂಕು ಸಂಯೋಜಕ ಚಂದ್ರಶೇಖರ್, ಬಿಬಿಎಂಪಿ ಸದಸ್ಯ ಅಶ್ವತ್ಥನಾರಾಯಣ ಗೌಡ, ಸಂಘದ ಅಧ್ಯಕ್ಷ ವಿ.ಮುರಳಿ, ಕಾರ್ಯದರ್ಶಿ ಅರುಣ್ ಕುಮಾರ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.