ADVERTISEMENT

ಅಂಬೇಡ್ಕರ್ ಪರಿನಿರ್ವಾಣದ ಅಂಗವಾಗಿ ಬೈಕ್ ರ‌್ಯಾಲಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST
ಅಂಬೇಡ್ಕರ್ ಪರಿನಿರ್ವಾಣದ ಅಂಗವಾಗಿ ಬೈಕ್ ರ‌್ಯಾಲಿ
ಅಂಬೇಡ್ಕರ್ ಪರಿನಿರ್ವಾಣದ ಅಂಗವಾಗಿ ಬೈಕ್ ರ‌್ಯಾಲಿ   

ಯಲಹಂಕ: ದಲಿತ ಸಂಘರ್ಷ ಸಮಿತಿ (ಸಮತಾವಾದ) ದೇವನಹಳ್ಳಿ ತಾಲ್ಲೂಕು ಸಮಿತಿಯ ವತಿಯಿಂದ ದಾಸರಹಳ್ಳಿ ಹಾಗೂ ಯಂಬ್ರಹಳ್ಳಿ ಗ್ರಾಮ ಶಾಖೆಗಳ ಉದ್ಘಾಟನಾ ಸಮಾರಂಭದ ಅಂಗವಾಗಿ ಇಲ್ಲಿನ ತಹಸೀಲ್ದಾರ್ ಕಚೇರಿಯಿಂದ ದೇವನಹಳ್ಳಿಯವರೆಗೆ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‌್ಯಾಲಿಗೆ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಕೆ. ತಮ್ಮಯ್ಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಹಾಗೂ ಎರಡು ಗ್ರಾಮ ಶಾಖೆಗಳ ಉದ್ಘಾಟನೆ ಹಿನ್ನೆಲೆಯಲ್ಲಿ ಈ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದ್ದು, ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಜನಾಂಗದವರಿಗೆ ನ್ಯಾಯ ಒದಗಿಸುವಂತೆ ಗಮನಸೆಳೆಯುವುದು ರ‌್ಯಾಲಿಯ ಮುಖ್ಯ ಉದ್ದೇಶವಾಗಿದೆ ಎಂದರು.

ರಾಜ್ಯ ಉಪ ಪ್ರಧಾನ ಸಂಚಾಲಕ ಎಚ್. ಮಾರಪ್ಪ ಮಾತನಾಡಿ, ಸರ್ಕಾರದಿಂದ ದೊರೆಯುವ ಸವಲತ್ತುಗಳು ಗ್ರಾಮೀಣ ಭಾಗದ ಬಡಜನರಿಗೆ ಸರಿಯಾಗಿ ತಲುಪುತ್ತಿಲ್ಲ. ರಾಜಕಾರಣಿಗಳು ಈ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇವನಹಳ್ಳಿಯಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡುವಂತೆ ಸರ್ಕಾರ ಆದೇಶ ಹೊರಡಿಸಿದ್ದರೂ ಸ್ಥಳೀಯ ಅಧಿಕಾರಿಗಳು ಇದುವರೆಗೂ ಜಾಗ ಮೀಸಲಿರಿಸಿಲ್ಲ ಎಂದು ಅವರು ದೂರಿದರು.
ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಇದೇ ವೇಳೆ ಎಚ್ಚರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ಪ್ರಧಾನ ಸಂಚಾಲಕ ಗುರುಸ್ವಾಮಿ, ಖಜಾಂಚಿ ಆವಲಹಳ್ಳಿ ರಮೇಶ್, ಬೆಂಗಳೂರು ಉತ್ತರ ತಾಲ್ಲೂಕು ಪ್ರಧಾನ ಸಂಚಾಲಕ ಡಿ.ವಿ.ವೀರಭದ್ರೇಗೌಡ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.