ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ:ದರಣಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2012, 19:40 IST
Last Updated 22 ಫೆಬ್ರುವರಿ 2012, 19:40 IST

ಬೆಂಗಳೂರು: ಅಂಬೇಡ್ಕರ್ ಭಾವಚಿತ್ರಕ್ಕೆ ನೈಸ್ ಕಂಪೆನಿ ಸಿಬ್ಬಂದಿ ಅವಮಾನ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ರಾಜ್ಯ ಜನಾಂದೋಲನ ಸಂಘಟನೆಯ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಬುಧವಾರ ಧರಣಿ ನಡೆಸಿದರು.

ಇದೇ ಭಾನುವಾರ (ಫೆ.19) ಬನ್ನೇರುಘಟ್ಟ ರಸ್ತೆಯ ಪಿಳ್ಳಗಾನಹಳ್ಳಿ ಗ್ರಾಮದ ಸರ್ವೆ ನಂ. 1ರಲ್ಲಿ ಹಾಕಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ. ಘಟನೆ ನಡೆದ ದಿನದಂದೇ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ. ಆದರೆ ನೈಸ್ ಸಿಬ್ಬಂದಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ. ಮರಿಸ್ವಾಮಿ ಮಾತನಾಡಿ `ಈ ಸರ್ಕಾರವು ಗುಡಿಸಲು ನಿವಾಸಿಗಳನ್ನು ಎತ್ತಂಗಡಿ ಮಾಡಿಸುವುದು, ಬಡ ಮಕ್ಕಳು ಓದುವ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಸೇರಿದಂತೆ  ಮಡೆಸ್ನಾನ, ನರಬಲಿ, ಶಿಕ್ಷಣದ ಕೇಸರೀಕರಣಕ್ಕೆ ಒತ್ತಾಸೆ ನೀಡುವ ಕೃತ್ಯಗಳನ್ನು ಮಾಡುತ್ತಿದೆ. ಈ ಕೆಲಸಗಳ ನಡುವೆ ದಲಿತ ಹಾಗೂ ಹಿಂದುಳಿದ ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ನೈಸ್ ಸಿಬ್ಬಂದಿಯನ್ನು ಬಂಧಿಸದಿದ್ದಲ್ಲಿ ತೀವ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ರಾಜ್ಯ ಕಾರ್ಯದರ್ಶಿ ಎ.ಮುನಿರಾಜು, ಬೆಳ್ತೂರ್ ವೆಂಕಟೇಶ್ ಸೇರಿದಂತೆ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.