ಬೆಂಗಳೂರು: ದಾಖಲೆ ಪತ್ರಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ₨ 13 ಲಕ್ಷ ಮೌಲ್ಯದ 3,300 ಸೀರೆಗಳನ್ನು ವಶಪಡಿಸಿಕೊಂಡಿರುವ ಯಶವಂತಪುರ ಪೊಲೀಸರು, ಚಾಲಕ ನಾಗರಾಜ್ ಮತ್ತು ಕ್ಲೀನರ್ ಮಂಜುನಾಥ್ ಎಂಬುವರನ್ನು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ನಡೆಸಲು ಚುನಾವಣಾಧಿಕಾರಿಗಳು ಹಾಗೂ ಪೊಲೀಸರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿದೆ. ಈ ತಂಡ ಸಂಜೆ 4.30ರ ಸುಮಾರಿಗೆ ಗೊರಗುಂಟೆಪಾಳ್ಯದ ಬಳಿ ಕರ್ತವ್ಯ ನಿರ್ವಹಿಸುತ್ತಿತ್ತು. ಆಗ ತುಮಕೂರು ರಸ್ತೆ ಮಾರ್ಗವಾಗಿ ಬಂದ ಲಾರಿಯಲ್ಲಿ (ಕೆಎ 27 ಎ 4273) ಸೀರೆಗಳ ಬಂಡಲ್ಗಳಿದ್ದವು. ಆ ಸೀರೆಗಳಿಗೆ ಸಂಬಂಧಪಟ್ಟ ದಾಖಲೆಗಳು ಇರಲಿಲ್ಲವಾದ್ದರಿಂದ ಲಾರಿಯನ್ನು ಜಪ್ತಿ ಮಾಡಿ ಚಾಲಕರನ್ನು ಬಂಧಿಸಲಾಗಿದೆ’ ಎಂದು ಉತ್ತರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.
‘ಮಾರಾಟ ಮಾಡುವ ಉದ್ದೇಶದಿಂದ ಸೀರೆಗಳನ್ನು ತಿಪಟೂರಿನಿಂದ ಚಿಕ್ಕಪೇಟೆಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಚಾಲಕ ನಾಗರಾಜ್ ಹೇಳಿಕೆ ಕೊಟ್ಟಿದ್ದಾನೆ. ಆದರೆ, ಅವರ ಬಳಿ ಸೂಕ್ತ ದಾಖಲೆಗಳಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ಸಾಗಿಸಲಾಗುತ್ತಿತ್ತೇ ಎಂಬ ಬಗ್ಗೆ ಇನ್ನು ಖಚಿತ ಮಾಹಿತಿ ಸಿಕ್ಕಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.