ADVERTISEMENT

ಅಡುಗೆ ಅನಿಲ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2012, 19:30 IST
Last Updated 10 ಅಕ್ಟೋಬರ್ 2012, 19:30 IST

ಬೆಂಗಳೂರು: `ಅಡುಗೆ ಅನಿಲದ ಸಿಲಿಂಡರ್‌ಗಳ ಸಂಖ್ಯೆಯನ್ನು ಕಡಿತ ಮಾಡಿರುವ ಕೇಂದ್ರದ ಯುಪಿಎ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಅಕ್ಟೋಬರ್ 12ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ~ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೀನಾ ಪ್ರಕಾಶ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ನೀಡುತ್ತಿದ್ದ ಸಿಲಿಂಡರ್‌ಗಳ ಸಂಖ್ಯೆಯನ್ನು ವರ್ಷವೊಂದಕ್ಕೆ ಆರಕ್ಕೆ ಮಿತಿಗೊಳಿಸಲು ತೆಗೆದುಕೊಂಡಿರುವ ನಿರ್ಧಾರದಿಂದ ಮಧ್ಯಮ ವರ್ಗದ ಮಹಿಳೆಯರಿಗೆ ಆಘಾತವಾಗಿದೆ.

ಕನಿಷ್ಠ ತಿಂಗಳಿಗೆ ಒಂದು ಸಿಲಿಂಡರ್ ಉಪಯೋಗಿಸುವಂತ ಶೇ 70 ರಷ್ಟು ಕುಟುಂಬಗಳು ದೇಶದಲ್ಲಿದೆ. ಇದರ ಪರಿಣಾಮ ಕುಟುಂಬ ವ್ಯವಸ್ಥೆಯ ಮೇಲೆ ಮಾತ್ರವಲ್ಲ ಬಿಸಿಯೂಟ ಹಾಗೂ ಅಂಗನವಾಡಿಯಲ್ಲಿ ಇದೇ ಪರಿಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರದ ಈ ಜನವಿರೋಧಿ ನೀತಿಯಿಂದಾಗಿ ಈಗಾಗಲೇ ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ~ ಆಕ್ರೋಶ ವ್ಯಕ್ತಪಡಿಸಿದರು.

`ಪ್ರತಿಭಟನೆಯು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಯಲಿದ್ದು,  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ರಾಷ್ಟ್ರೀಯ ಮಹಿಳಾ ಮೋರ್ಚಾ ವಕ್ತಾರರಾದ ನಿರ್ಮಲಾ ಸೀತಾರಾಮನ್ ಸೇರಿದಂತೆ ಸಚಿವರು, ಸಂಸದರು ಶಾಸಕರು ಭಾಗವಹಿಸುವರು~ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಪೂರ್ಣಿಮಾ ಪ್ರಕಾಶ್, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಲೋಚನಾ ಭಟ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.