ಅತ್ಯಾಚಾರ ಆರೋಪಿಗೆ ನ್ಯಾಯಾಂಗ ಬಂಧನ
ಪ್ರಜಾವಾಣಿ ವಾರ್ತೆ Published 20 ಡಿಸೆಂಬರ್ 2012, 19:59 IST Last Updated 20 ಡಿಸೆಂಬರ್ 2012, 19:59 IST ಬೆಂಗಳೂರು: ಪಟಾಲಮ್ಮಲೇಔಟ್ನಲ್ಲಿ ಹದಿನೈದು ವರ್ಷದ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಬಂಧಿತನಾಗಿರುವ ಆರೋಪಿ ಅಶ್ವತ್ಥ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಬಾಲಕಿಯನ್ನು ಬುಧವಾರ ಸಂಜೆ ವೈದೇಹಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಬಳಿಕ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿಲಾಯಿತು. ಪ್ರಾಥಮಿಕ ಚಿಕಿತ್ಸೆ ನಂತರ ನಿಮ್ಹಾನ್ಸ್ ವೈದ್ಯರ ಶಿಫಾರಸಿನಂತೆ ಬಾಲಕಿಯನ್ನು ಮಡಿವಾಳದಲ್ಲಿರುವ ಬಾಲಮಂದಿರಕ್ಕೆ ವರ್ಗಾಯಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ವರದಿ ಶನಿವಾರ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾಗಿರುವ ಬಾಲಕಿಯ ತಂದೆ ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
`ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಅವರು, `ಮಗಳ ಮೇಲೆ ಅತ್ಯಾಚಾರ ನಡೆದಿರುವ ಸಂಗತಿಯನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡ ನಮ್ಮ ಊರಿನವರು ಬೆಳಿಗ್ಗೆಯಿಂದ ಕರೆ ಮಾಡಿ ಘಟನೆಯ ವಿವರಣೆ ಕೇಳುತ್ತಿದ್ದಾರೆ. ಇದರಿಂದ ತುಂಬಾ ಸಂಕಟವಾಗಿದೆ. ಮಾನ ಹೋದ ಮೇಲೆ ಆರೋಪಿಗೆ ಯಾವ ಶಿಕ್ಷೆ ಕೊಟ್ಟರೇನು ಪ್ರಯೋಜನ' ಎಂದು ಅಳಲು ತೋಡಿಕೊಂಡರು.