ADVERTISEMENT

ಅತ್ಯಾಚಾರ - ವಿದ್ಯಾರ್ಥಿನಿಯರ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2012, 19:30 IST
Last Updated 16 ಅಕ್ಟೋಬರ್ 2012, 19:30 IST
ಅತ್ಯಾಚಾರ - ವಿದ್ಯಾರ್ಥಿನಿಯರ  ರ್‍ಯಾಲಿ
ಅತ್ಯಾಚಾರ - ವಿದ್ಯಾರ್ಥಿನಿಯರ ರ್‍ಯಾಲಿ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನ್ಯಾಷನಲ್ ಲಾ ಸ್ಕೂಲ್‌ನ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಜ್ಞಾನಭಾರತಿ ಪೊಲೀಸ್ ಅಧಿಕಾರಿಗಳ ಕರ್ತವ್ಯ ಲೋಪವೇ ಕಾರಣವೆಂದು ಆರೋಪಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ವಸತಿ ನಿಲಯದಿಂದ ಜ್ಞಾನ ಭಾರತಿ ಪೊಲೀಸ್ ಠಾಣೆಯವರೆಗೆ ಮಂಗಳವಾರ ರ್‍ಯಾಲಿ ನಡೆಸಿದರು.

ಎಲ್ಲ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಜ್ಞಾನ ಭಾರತಿ ಪೊಲೀಸ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. `1,300 ಎಕರೆ ವಿಶಾಲವಾಗಿರುವ ವಿ.ವಿಯ ಆವರಣದಲ್ಲಿ ವಿದ್ಯಾರ್ಥಿನಿಯರು ಮುಕ್ತವಾಗಿ ಓಡಾಡುವ ಪರಿಸ್ಥಿತಿಯಿಲ್ಲ. ಹೊರಗಡೆಯಿಂದ ಆವರಣಕ್ಕೆ ಆಗಮಿಸುವ ರೌಡಿ ಹಾಗೂ ಪಡ್ಡೆ ಹುಡುಗರಿಂದ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಜ್ಞಾನಭಾರತಿ ಪೋಲಿಸರು ಸಂಪೂರ್ಣ ವಿಫಲರಾಗಿದ್ದಾರೆ~ ಎಂದು ವಿದ್ಯಾರ್ಥಿನಿ ಸುರೇಖಾ ದೂರಿದರು.

`ಈ ಆವರಣದಲ್ಲಿ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿಯಲು ಬರುವ ಕದಿಮರೊಂದಿಗೆ ಪೊಲೀಸರು ಶಾಮೀಲಾಗಿದ್ದಾರೆ. ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಾಧ್ಯವಾಗದೇ ಇರುವುದು ನೋವಿನ ಸಂಗತಿ. ಈ ಠಾಣೆಯ ನಿಷ್ಕ್ರಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳನ್ನು ಉನ್ನತ ಮಟ್ಟದ ತನಿಖೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.

ವಿವಿಧ ಸಂಘಟನೆಗಳಿಂದ ಖಂಡನೆ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‌ಓ)ಸೇರಿಂದತೆ ವಿವಿಧ ಸಂಘಟನೆಗಳ ಜಿಲ್ಲಾ ಸಮಿತಿಗಳು ಘಟನೆಯನ್ನು ತೀವ್ರವಾಗಿ ಖಂಡಿಸಿವೆ. ವೈದ್ಯಕೀಯ ಪರೀಕ್ಷೆಯ ವರದಿಯ ಆಧಾರದ ಮೇಲೆ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.