ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಸ್ಯಾಂಕಿ ಉದ್ಯಾನವನ ನಡಿಗೆದಾರರ ಸಂಘದ ಸದಸ್ಯರು ನಗರದ ಸ್ಯಾಂಕಿ ಕೆರೆಯಿಂದ ಶೇಷಾದ್ರಿಪುರದ ನೆಹರೂ ವೃತ್ತದವರೆಗೆ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
`ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಅತ್ಯಾಚಾರ ನಡೆದರೂ ಬಹಳಷ್ಟು ಸಂದರ್ಭಗಳಲ್ಲಿ, ಆ ಪ್ರಕರಣಗಳು ಬೆಳಕಿಗೇ ಬರುವುದಿಲ್ಲ. ಅತ್ಯಾಚಾರದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸದಿರುವುದೇ ಅತ್ಯಾಚಾರಗಳು ಹೆಚ್ಚುತ್ತಿರಲು ಕಾರಣ. ಹೀಗಾಗಿ ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕು' ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
`ಅತ್ಯಾಚಾರ ಆರೋಪಿಗಳಿಗೆ ನೀಡುವ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕು. ಅತ್ಯಾಚಾರ ಪ್ರಕರಣಗಳನ್ನು ಶೀಘ್ರವಾಗಿ ವಿಚಾರಣೆ ನಡೆಸಿ, ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಜಾರಿಗೊಳಿಸಬೇಕು. ಇದರಿಂದ ಶಿಕ್ಷೆಯ ಭಯಕ್ಕಾದರೂ ಅತ್ಯಾಚಾರಗಳು ಕಡಿಮೆಯಾಗುತ್ತವೆ' ಎಂದು ಸಂಘದ ಅಧ್ಯಕ್ಷ ಡಾ.ಎ.ಆರ್.ಆನಂದ್ ಹೇಳಿದರು.
ಶೇಷಾದ್ರಿಪುರ ಮಾರ್ಗವಾಗಿ ರಾಜಭವನಕ್ಕೆ ಹೊರಟಿದ್ದ ಪ್ರತಿಭಟನಾಕಾರರನ್ನು ನೆಹರೂ ವೃತ್ತದಲ್ಲಿ ಪೊಲೀಸರು ತಡೆದರು. ನಂತರ ನಿಯೋಗದಲ್ಲಿ ರಾಜಭವನಕ್ಕೆ ತೆರಳಿದ ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.