ನೆಲಮಂಗಲ: `ಗ್ರಂಥಾಲಯಗಳು ಆಧುನಿಕ ದೇವಾಲಯಗಳಿದ್ದಂತೆ. ವಿದ್ಯಾರ್ಥಿಗಳಲ್ಲಿ ಅಧ್ಯಯನಾಸಕ್ತಿಯನ್ನು ಮೂಡಿಸಲು ಪ್ರಾಥಮಿಕ ಶಾಲೆಗಳಲ್ಲಿಯೂ ಗ್ರಂಥಾಲಯಗಳನ್ನು ತೆರೆಯಲಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳುವ ಪೂರಕ ವಾತಾವರಣ ಸೃಷ್ಟಿಸಬೇಕು~ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಮಂಜುನಾಥ್ ಹೇಳಿದರು.
ತಾಲ್ಲೂಕಿನ ಬೂದಿಹಾಲ್ನ ಮಾಚೋನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಮುದಾಯದತ್ತ ಶಾಲೆ, ಗ್ರಂಥಾಲಯ ಉದ್ಘಾಟನೆ, ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಮತ್ತು ಹಿರಿಯ ಸಾಧಕ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ವಿ.ಕುಮಾರ್, `ನಿವೃತ್ತ ಮುಖ್ಯ ಶಿಕ್ಷಕ ಟಿ.ಗಂಗರಾಜು ಅವರನ್ನು ಗ್ರಾಮದ ವತಿಯಿಂದ ಸನ್ಮಾನಿಸುತ್ತಿರುವುದು ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ಸಾಕ್ಷಿ~ ಎಂದರು.
ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಡಿ.ಎಚ್. ನಾಗರಾಜು, `ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ ಎನ್ನುವುದಕ್ಕೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳಲ್ಲಿರುವುದೇ ಸಾಕ್ಷಿ~ ಎಂದರು.
ಎಸ್ಡಿಎಂಸಿ ಮಾಜಿ ಅಧ್ಯಕ್ಷ ಆರ್.ಅಶ್ವತ್ಥಪ್ಪ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಮುಖ್ಯ ಶಿಕ್ಷಕ ಎಂ.ಆರ್.ಮಲ್ಲಿಕಾರ್ಜುನ್, `ಮುಂದಿನ ಶೈಕ್ಷಣಿಕ ವರ್ಷದಿಂದ ದಾಖಲಾಗುವ ಎಲ್ಲ ವಿದ್ಯಾರ್ಥಿಗಳಿಗೆ ಎಸ್ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ತಲಾ 1000 ರೂಪಾಯಿಗಳ ಪ್ರೋತ್ಸಾಹ ಧನ ಕೊಡಿಸಲಾಗುವುದು~ ಎಂದರು.
ಬರದಿ ಮಂಡಿಗೆರೆ ಶಾಲೆಯ ಮುಖ್ಯ ಶಿಕ್ಷಕಿಯಾದ ಸಿ.ಎಸ್.ಇಂದಿರಾ, ಸಂಯೋಜನಾಧಿಕಾರಿಗಳಾದ ರೇಣುಕಾಸ್ವಾಮಿ, ಮರುಳಸಿದ್ದಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರಾಮಲಕ್ಷ್ಮಮ್ಮ ಪುರುಷೋತ್ತಮ್, ಎಸ್ಡಿಎಂಸಿ ಅಧ್ಯಕ್ಷೆ ಆರ್.ಜಲಜಾಕ್ಷಿ ವೇದಿಕೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.