ADVERTISEMENT

ಅನರ್ಹರಿಗೆ ಸೌಲಭ್ಯ: ಹೋರಾಟಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 13 ಮೇ 2012, 19:30 IST
Last Updated 13 ಮೇ 2012, 19:30 IST

ಯಲಹಂಕ: ದಲಿತ ಸಮುದಾಯಕ್ಕೆ ಸಿಗಬೇಕಾದ ಸೌಲಭ್ಯಗಳನ್ನು ಅನರ್ಹರು ಪಡೆದುಕೊಂಡಾಗ ಅದರ ವಿರುದ್ಧ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ. ಕಾರಜೋಳ ಸಲಹೆ ನೀಡಿದರು.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ಬೀದರ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೋಧಕೇತರ ನೌಕರರ ಸಂಘದ ಆಶ್ರಯದಲ್ಲಿ ಹೆಬ್ಬಾಳದ ಹೈನು ವಿಜ್ಞಾನ ಮಹಾವಿದ್ಯಾಲಯದ ಕನ್ನಡ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 121ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಬಲಾಢ್ಯರು ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ನೀಡಿ ಮೀಸಲಾತಿ ಸೌಲಭ್ಯ ಪಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಡೀ ರಾಜ್ಯದಲ್ಲಿರುವ ಎಲ್ಲ ದಲಿತ ಯುವಕರು ಹಾಗೂ ನೌಕರರು ಸಂಘಟಿತರಾಗಿ ಹೋರಾಟ ನಡೆಸಿದರೆ ಆದಷ್ಟು ಬೇಗನೆ ಇಂತಹ ಅಕ್ರಮ ತಡೆಗಟ್ಟಲು ಸಾಧ್ಯವಾಗುತ್ತದೆ~ ಎಂದು ಅವರು ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ ಮಾತನಾಡಿ, `ಅಂಬೇಡ್ಕರ್ ಕೇವಲ ಒಂದು ಸಮುದಾಯದ ಏಳಿಗೆಗಾಗಿ ಹೋರಾಟ ಮಾಡದೆ ಮಹಿಳೆಯರು, ಕೂಲಿ ಕಾರ್ಮಿಕರು, ರೈತರು ಸೇರಿದಂತೆ ಇಡೀ ಶೋಷಿತ ವರ್ಗದ ಜನರ ಏಳಿಗೆಗಾಗಿ ದುಡಿದಂತಹ ಮಹಾನ್ ಪುರುಷ. ಈ ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರ~ ಎಂದು ಬಣ್ಣಿಸಿದರು.

ಕಾಂಗ್ರೆಸ್ ನಾಯಕ ಉಗ್ರಪ್ಪ, ಮಾಜಿ ಶಾಸಕ ಎಂ.ಆರ್.ಸೀತಾರಾಂ ಮಾತನಾಡಿದರು. ಪಶುವೈದ್ಯಕೀಯ ಹಾಗೂ ಹೈನು ವಿಜ್ಞಾನ ಮಹಾವಿದ್ಯಾಲಯದ ಮುಖ್ಯಸ್ಥ ಎಸ್.ಯತಿರಾಜ್, ಡಾ. ಬಿ.ವಿ.ವೆಂಕಟೇಶಯ್ಯ, ವ್ಯವಸ್ಥಾಪಕ ಮಂಡಳಿ ಸದಸ್ಯ ಟಿ.ಮುಕುಂದ ವರ್ಮ, ಕೆಪಿಸಿಸಿ ಸದಸ್ಯ ಎಂ.ಆನಂದಕುಮಾರ್, ಜೆಡಿ (ಎಸ್) ಪ್ರಧಾನ ಕಾರ್ಯದರ್ಶಿ ಸಿ.ಮುನಿಕೃಷ್ಣ, ಸಂಘದ ಕಾರ್ಯಾಧ್ಯಕ್ಷ ರಾಮಪ್ಪ ಎಚ್.ಕೊರವಾರ, ಪ್ರಧಾನ ಕಾರ್ಯದರ್ಶಿ ಸದಾಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.