ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿ ಬುಧವಾರ ರಾತ್ರಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆಜಿರಾ ಭಾನು (35) ಎಂಬುವರು ಸಾವನ್ನಪ್ಪಿದ್ದಾರೆ.
ಮೂಲತಃ ರಾಮನಗರ ಜಿಲ್ಲೆ ಚನ್ನಪಟ್ಟಣದ ಆಜಿರಾ ಅವರು ನಗರದ ನೀಲಸಂದ್ರದಲ್ಲಿರುವ ತಂಗಿಯ ಮನೆಗೆ ಬಂದಿದ್ದರು. ಅವರು ಸೈಯದ್ ರಬ್ಬಾನಿ ಎಂಬ ಪರಿಚಿತ ವ್ಯಕ್ತಿಯೊಂದಿಗೆ ಬೈಕ್ನಲ್ಲಿ ಚನ್ನಪಟ್ಟಣಕ್ಕೆ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಲಾರಿ, ಸೈಯದ್ ಅವರ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದ ಆಜಿರಾ ಅವರ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಯದ್ ಅವರ ಬಲಗಾಲು ಮುರಿದಿದೆ ಮತ್ತು ತಲೆಗೆ ತೀವ್ರ ಪೆಟ್ಟಾಗಿದೆ. ಘಟನೆ ನಂತರ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಕೆಂಗೇರಿ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕ್ ಸವಾರ ಸಾವು
ವಿಲ್ಸನ್ ಗಾರ್ಡನ್ ಸಮೀಪದ ಪಾಸ್ಪೋರ್ಟ್ ಕಚೇರಿ ಬಳಿ ಗುರುವಾರ ರಾತ್ರಿ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಚೇತನ್ (30) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬ್ಯಾಟರಾಯನಪುರ ನಿವಾಸಿಯಾದ ಚೇತನ್, ಕೋರಮಂಗಲದ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಕೆಲಸ ಮುಗಿಸಿಕೊಂಡು ರಾತ್ರಿ 8.30ರ ಸುಮಾರಿಗೆ ಮನೆಗೆ ವಾಪಸ್ ಹೋಗುವಾಗ ಪಾಸ್ಪೋರ್ಟ್ ಕಚೇರಿ ಬಳಿ ಹಿಂದಿನಿಂದ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕೆಳಗೆ ಬಿದ್ದ ಅವರ ಮೇಲೆ ಬಸ್ನ ಚಕ್ರ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.