ಬೆಂಗಳೂರು: ‘ನಮ್ಮ ದೇಶದಲ್ಲಿ ಕೊಳೆಗೇರಿಗಳು ಇಲ್ಲದ ನಗರಗಳಿಲ್ಲ. ಕಳೆದ 30 ವರ್ಷಗಳಿಗೆ ಹೋಲಿಸಿದರೆ ಸ್ಲಮ್ಗಳ ಅಭಿವೃದ್ಧಿಯಾಗಿದೆ. ಇನ್ನೂ ಹೆಚ್ಚು ಅಭಿವೃದ್ಧಿಯಾಗಬೇಕು’ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಬೆಂಗಳೂರು ಕೊಳಚೆ ಪ್ರದೇಶಗಳ ಅಭಿವೃದ್ಧಿ ಕುರಿತು ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ ಜನಪ್ರತಿನಿಧಿಗಳ ಜತೆಗಿನ ಸಂವಾದದಲ್ಲಿ ಮಾತನಾಡಿದರು.
‘ಬೆಂಗಳೂರು ಕೊಳಚೆ ಪ್ರದೇಶಗಳ ಅಭಿವೃದ್ಧಿ ಕುರಿತು ಸ್ಥಳೀಯ ರಾಜಕೀಯ ನಾಯಕರ ಗ್ರಹಿಕೆ ಬಗೆಗಿನ ಅಧ್ಯಯನ’ ಎಂಬ ವಿಷಯದಲ್ಲಿ ವಿದ್ಯಾರ್ಥಿ ಪ್ರವೀಣ್ ಕುಮಾರ್ ಸಂಶೋಧನೆ ನಡೆಸಿ ಸಿದ್ಧಪಡಿಸಿದ ವರದಿ ಮಂಡಿಸಿದರು.
‘ಕೊಳೆಗೇರಿಗಳ ವಿದ್ಯಾವಂತ ಯುವಜನರು ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. ಅಲ್ಲಿನ ಜನರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಆದರೆ, ಶಾಲೆ ಬಿಟ್ಟವರಿಗೆ ವಿದ್ಯಾಭ್ಯಾಸ ಮುಂದುವರಿಸುವಂತೆ ಪ್ರೇರಣೆ ನೀಡಬಲ್ಲ ನಾಯಕರ ಕೊರತೆ ಇದೆ. ಕುಡಿಯುವ ನೀರು, ನೈರ್ಮಲ್ಯ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಸ್ಥಳೀಯ ಮುಖಂಡರಿಗೆ ಕೊಳೆಗೇರಿ ಕಾಯ್ದೆ ಮತ್ತು ಸವಲತ್ತುಗಳ ಬಗ್ಗೆ ಮಾಹಿತಿ ಕೊರತೆ ಇದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.