ಬೆಂಗಳೂರು: ಬಾಕಿ ಇರುವ ಎಂಟು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಇದೇ 12ರಂದು ಬಿಜೆಪಿಯ ಪ್ರಮುಖರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಅಂದು ಪಟ್ಟಿಯನ್ನು ಅಂತಿಮಗೊಳಿಸಿ, 13ರಂದು ದೆಹಲಿಯಲ್ಲಿ ನಡೆಯುವ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಿದ್ದಾರೆ. ಅಂದೇ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಪ್ರೊ ಶಿವಲಿಂಗಯ್ಯ ಅಥವಾ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರನ್ನು ಮಂಡ್ಯ ಕ್ಷೇತ್ರದಿಂದ ಕಣಕ್ಕೆ ಇಳಿಸುವ ಚಿಂತನೆ ನಡೆದಿದೆ. ಕೋಲಾರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್ ಭೋವಿ ಸಮಾಜಕ್ಕೆ ಸೇರಿದ ಕೆ.ಕೇಶವ ಅವರಿಗೆ ಟಿಕೆಟ್ ನೀಡಿದೆ. ಹೀಗಾಗಿ ಅದೇ ಸಮುದಾಯದ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ.
ಅವರ ಬದಲಿಗೆ, ಡಿ.ಎಸ್.ವೀರಯ್ಯ ಅವರಿಗೆ ಟಿಕೆಟ್ ನೀಡುವ ಬಗ್ಗೆ ಸಮಾಲೋಚನೆ ನಡೆದಿದೆ ಎಂದು ಗೊತ್ತಾಗಿದೆ. ಉಡುಪಿ– ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ ಅಥವಾ ಪತ್ರಕರ್ತ ಪ್ರತಾಪ್ ಸಿಂಹ, ಬೀದರ್ನಿಂದ ಗುರುಪಾದಪ್ಪ ನಾಗಮಾರಪಲ್ಲಿ ಅಥವಾ ಅವರ ಪುತ್ರ ಸೂರ್ಯಕಾಂತ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.
ತುಮಕೂರಿನಿಂದ ಬಸವರಾಜುಗೆ ಟಿಕೆಟ್ ನೀಡಬೇಕೆಂದು ಯಡಿಯೂರಪ್ಪ ಪಟ್ಟುಹಿಡಿದಿದ್ದಾರೆ. ವರಿಷ್ಠರು ಒಪ್ಪದಿದ್ದರೆ ನಂದೀಶ್ ಅವರಿಗೆ ಟಿಕೆಟ್ ದೊರೆಯುವ ಸೂಚನೆಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.