ADVERTISEMENT

ಅವಕಾಶಗಳ ಸದುಪಯೋಗಕ್ಕೆ ಕರೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 20:06 IST
Last Updated 6 ಸೆಪ್ಟೆಂಬರ್ 2013, 20:06 IST
ಚಿಲ್ದ್ರನ್ಸ್ ಮೂವ್‌ಮೆಂಟ್ ಫಾರ್ ಸಿವಿಕ್ ಅವೇರ್‌ನೆಸ್ (ಸಿಎಂಸಿಎ) ಸಂಸ್ಥೆಯು `ಸಕ್ರಿಯ ನಾಗರಿಕತ್ವ ದಿನ'ದ ಅಂಗವಾಗಿ ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತ್ಯಾಜ್ಯ ವಸ್ತುಗಳಿಂದ ತಯಾರಿಸಿದ ಕಲಾಕೃತಿಗಳನ್ನು ವೀಕ್ಷಿಸಿದರು	- ಪ್ರಜಾವಾಣಣಿ  ಚಿತ್ರ
ಚಿಲ್ದ್ರನ್ಸ್ ಮೂವ್‌ಮೆಂಟ್ ಫಾರ್ ಸಿವಿಕ್ ಅವೇರ್‌ನೆಸ್ (ಸಿಎಂಸಿಎ) ಸಂಸ್ಥೆಯು `ಸಕ್ರಿಯ ನಾಗರಿಕತ್ವ ದಿನ'ದ ಅಂಗವಾಗಿ ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತ್ಯಾಜ್ಯ ವಸ್ತುಗಳಿಂದ ತಯಾರಿಸಿದ ಕಲಾಕೃತಿಗಳನ್ನು ವೀಕ್ಷಿಸಿದರು - ಪ್ರಜಾವಾಣಣಿ ಚಿತ್ರ   

ಬೆಂಗಳೂರು: `ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದೇವೆ ಎಂಬ ಕೀಳರಿಮೆ ಬೆಳೆಸಿಕೊಳ್ಳದೆ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಾಧನೆಗೆ ಮುಂದಾಗಬೇಕು' ಎಂದು ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್ ಕಿವಿಮಾತು ಹೇಳಿದರು.

ಚಿಲ್ದ್ರನ್ಸ್ ಮೂವ್‌ಮೆಂಟ್ ಫಾರ್ ಸಿವಿಕ್ ಅವೇರ್‌ನೆಸ್ (ಸಿಎಂಸಿಎ) ಸಂಸ್ಥೆಯು ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ `ಸಕ್ರಿಯ ನಾಗರಿಕತ್ವ ದಿನ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಳೆದ ನಾಲ್ಕೈದು ದಶಕಗಳಿಗೆ ಹೋಲಿಸಿದರೆ ತಂತ್ರಜ್ಞಾನದಲ್ಲಿ ಹೆಚ್ಚಿನ ಬೆಳವಣಿಗೆಯಾಗಿದೆ. ಸರ್ಕಾರ ಕೂಡ ಉತ್ತಮ ಯೋಜನೆಗಳನ್ನು ರೂಪಿಸುತ್ತಿದೆ. ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ದೇಶದ ಮುಂದಿನ ಭವಿಷ್ಯ ಇಂದಿನ ಮಕ್ಕಳ ಕೈಯಲ್ಲಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದರು.

ನಟ ರಮೇಶ್ ಅರವಿಂದ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಹುದ್ದೆಗೇರುವ ಜತೆಗೆ ಉತ್ತಮ ನಾಗರಿಕರಾಗಬೇಕು ಎಂಬ ಗುರಿ ಇಟ್ಟುಕೊಳ್ಳಬೇಕು. ನಮ್ಮ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಮಕ್ಕಳ ಮೇಲಿದೆ ಎಂದು ಹೇಳಿದರು.

ಸಮಾಜದ ಬಗೆಗಿನ ಕಾಳಜಿ, ಸರ್ಕಾರ ಜಾರಿಗೆ ತರುವ ಕಾನೂನುಗಳ ಪಾಲನೆಗೆ ಸಹಕಾರ, ಶಾಂತಿಯುತ ಸಹಬಾಳ್ವೆ ಹಾಗೂ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕು ಎಂಬ ಸಂಸ್ಥೆಯ ಧ್ಯೇಯವನ್ನು ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ನಗರದ  32 ಸರ್ಕಾರಿ ಶಾಲೆಗಳ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳುಭಾಗವಹಿಸಿದ್ದರು.

ಸಿಎಂಸಿಎ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ ಪ್ರಸಾದ್, ಅಧ್ಯಕ್ಷ ಡಾ.ಯಲ್ಲಪ್ಪ ರೆಡ್ಡಿ, ನಿರ್ವಾಹಕ ಟ್ರಸ್ಟಿ ಪ್ರಿಯಾ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.