ಪೀಣ್ಯ ದಾಸರಹಳ್ಳಿ: `ಮಹಿಳೆಯರು ಪುರುಷರಷ್ಟೇ ಸಮಾನರಾಗಿದ್ದರೂ ಸಂಸಾರಿಕ ಜಂಜಾಟದಿಂದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ~ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ವಿಷಾದಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಹೆಸರಘಟ್ಟ ರಸ್ತೆಯಲ್ಲಿರುವ ಸೌಂದರ್ಯ ನಿರ್ವಹಣಾ ಹಾಗೂ ವಿಜ್ಞಾನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ `ಜ್ಞಾನ ಆರ್ಥಿಕತೆ~ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
`ತೊಟ್ಟಿಲು ತೂಗುವ ಕೈಗಳು ಇಂದು ಜಗತ್ತನ್ನೇ ತೂಗುತ್ತಿವೆ. ಅವಕಾಶ ಸಿಕ್ಕರೆ ಮಹಿಳೆ ಎಲ್ಲ ರಂಗಗಳಲ್ಲಿಯೂ ಸಾಧನೆ ಮಾಡಬಲ್ಲಳು. ವಂಚಿತ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಯಬೇಕಾಗಿದೆ~ ಎಂದರು.
ಸಂಸ್ಥೆಯ ಅಧ್ಯಕ್ಷ ಸೌಂದರ್ಯ ಮಂಜಪ್ಪ, `ಸಂಪತ್ತಿನ ಕೊರತೆ ಹಿನ್ನೆಲೆಯಲ್ಲಿ ಮುಂದಿನ ಮತ್ತು ಇಂದಿನ ಪೀಳಿಗೆ ಜ್ಞಾನ ಆರ್ಥಿಕತೆಯನ್ನು ಮೂಲವಾಗಿ ಪಡೆಯಬೇಕಾದ ಅವಶ್ಯಕತೆ ಇದೆ~ ಎಂದರು. ಬೆಂಗಳೂರು ವಿವಿ ಕುಲಪತಿ ಡಾ.ಎನ್.ಪ್ರಭುದೇವ್, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಡೀನ್ ಡಾ.ಎಂ.ರಾಮಚಂದ್ರಗೌಡ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.