ADVERTISEMENT

ಆದೇಶ ಪ್ರಕಟಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಅವರ ಪತ್ನಿ ವಾಣಿಶ್ರೀ ವಿಶ್ವನಾಥ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಇದೇ 16ಕ್ಕೆ ಮುಂದೂಡಿದೆ.

ಶಾಸಕರ ಅರ್ಜಿಯ ಕುರಿತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಪ್ರಕಟಿಸಬೇಕಿತ್ತು. ಆದರೆ, ಲೊಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಉಮಾಕಾಂತನ್ ಅವರು ಸಲ್ಲಿಸಿರುವ ಆಕ್ಷೇಪಣಾ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಸೋಮವಾರಕ್ಕೆ ಆದೇಶ ಪ್ರಕಟಣೆ ಮುಂದೂಡಿದರು.

ಈ ಪ್ರಕರಣದಲ್ಲಿ ವಿಶ್ವನಾಥ್ ಮತ್ತು ವಾಣಿಶ್ರೀ ಅವರ ಬಂಧನದ ಅಗತ್ಯ ಇದೆಯೇ ಎಂಬುದರ ಬಗ್ಗೆ ಲೋಕಾಯುಕ್ತ ಎಸ್‌ಪಿಪಿ ಸಲ್ಲಿಸಿರುವ ಆಕ್ಷೇಪಣಾ ಹೇಳಿಕೆಯಲ್ಲಿ ಖಚಿತವಾಗಿ ತಿಳಿಸಿಲ್ಲ. ಮಂಗಳವಾರ ವಿಚಾರಣೆ ವೇಳೆ ನ್ಯಾಯಾಧೀಶರು ಹಲವು ಬಾರಿ ಪ್ರಶ್ನಿಸಿದ್ದರೂ ಸಮಂಜಸ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಪ್ರಕರಣದ ವಿಚಾರಣೆ ಮುಂದೂಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.