ADVERTISEMENT

ಆಯುಕ್ತರ ವರ್ಗಾವಣೆ: ಮುಖ್ಯಮಂತ್ರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಜನವರಿ 2011, 19:30 IST
Last Updated 25 ಜನವರಿ 2011, 19:30 IST

ಬೆಂಗಳೂರು: ಬಿಬಿಎಂಪಿ ಆಯುಕ್ತ ಸಿದ್ದಯ್ಯ ಅವರು ಆಡಳಿತ ನಿರ್ವಹಣೆಗೆ ಸಹಕಾರ ನೀಡುತ್ತಿಲ್ಲ. ಕೂಡಲೇ ಅವರನ್ನು ವರ್ಗಾವಣೆ ಮಾಡುವಂತೆ ಮೇಯರ್ ಎಸ್.ಕೆ.ನಟರಾಜ್ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.

ಮೇಯರ್, ಉಪಮೇಯರ್ ಹಾಗೂ ನಗರದ ಕೆಲವು ಶಾಸಕರ ನಿಯೋಗ ಮಂಗಳವಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಯುಕ್ತರಿಂದ ಜನಪ್ರತಿನಿಧಿಗಳಿಗೆ ಆಗುತ್ತಿರುವ ಅಸಹಕಾರದ ಬಗ್ಗೆ ವಿವರಿಸಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಮೇಯರ್, ‘ಸುಗಮ ಆಡಳಿತಕ್ಕೆ ಆಯುಕ್ತರು ಸಹಕಾರ ನೀಡುತ್ತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಅನಗತ್ಯವಾಗಿ ಕಡತಗಳ ಪರಿಶೀಲನೆ ಪ್ರಕ್ರಿಯೆ ನಡೆಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದರು.

‘ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿಗೆ ವ್ಯತಿರಿಕ್ತವಾಗಿ ಆದೇಶ ಹೊರಡಿಸುವ ಮೂಲಕ ಜನಪ್ರತಿನಿಧಿಗಳಿಗೆ ಅಗೌರವ ತೋರಿದ್ದಾರೆ.
ಅಧಿಕಾರಿಗಳು ಅಕ್ರಮ ನಡೆಸಿರುವ ಬಗ್ಗೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದಾಗ ನನಗೆ ಮಾಹಿತಿ ನೀಡದೇ ಏಕಾಏಕಿ ಅಧಿಕಾರಿಗಳನ್ನು ಅಮಾನತುಪಡಿಸಿರುವ ಬಗ್ಗೆಯೂ ಮಾಹಿತಿ ನೀಡಲಾಗಿದೆ’ ಎಂದು ಹೇಳಿದರು.

‘ಜನವರಿ ತಿಂಗಳು ಮುಗಿಯುತ್ತಾ ಬಂದರೂ ಯಾವುದೇ ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ತ್ವರಿತವಾಗಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳದಿರುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವರ ನೀಡಲಾಗಿದೆ. ಈ ಬಗ್ಗೆ ಆಯುಕ್ತರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.