ಬೆಂಗಳೂರು: ಅಮೃತ ವಿಶ್ವವಿದ್ಯಾಲಯದ ಆವರಣದಲ್ಲಿ ‘ಆರೋಹಣ: ವಿಜ್ಞಾನ ಉತ್ಸವ’ವನ್ನು ಗುರುವಾರ ಆಯೋಜಿಸಲಾಗಿತ್ತು.
ಉತ್ಸವದಲ್ಲಿ ಭಾಗವಹಿಸಿದ್ದ ವಿವಿಧ ಶಾಲಾ–ಕಾಲೇಜುಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಜ್ಞಾನದ ಕುರಿತಾದ ಪ್ರಾತ್ಯಕ್ಷಿಕೆಗಳನ್ನು ನೀಡಿದರು. ಇದರೊಂದಿಗೆ ವಿಜ್ಞಾನಕ್ಕೆ ಸಂಬಂಧಿಸಿದ ಸ್ಪರ್ಧೆ ಮತ್ತು ಆಟಗಳನ್ನು ಇಲ್ಲಿ ಆಯೋಜಿಸಲಾಗಿತ್ತು.
ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ನಿರಾಶ್ರಿತರನ್ನು ರಕ್ಷಿಸುವ ವಿಧಾನ, ಸಂಚಾರ ದಟ್ಟಣೆ ನಿವಾರಣೆಯ ಸುಲಭ ಸಾಧ್ಯತೆಗಳು ಹಾಗೂ ಪರ್ಯಾಯ ಇಂಧನ ಉತ್ಪಾದನಾ ಮಾರ್ಗಗಳ ಕುರಿತಾಗಿ ವಿದ್ಯಾರ್ಥಿಗಳು ರೂಪಿಸಿದ್ದ ಪ್ರಾತ್ಯಕ್ಷಿಕೆಗಳು ಗಮನ ಸೆಳೆದವು. ಎಂಜಿನಿಯರಿಂಗ್ ವಿದ್ಯಾರ್ಥಿಗಳು ವಿಮಾನ ತಯಾರಾಗುವ ಬಗೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ತಿಳಿಸಿದರು.
ಉತ್ಸವದ ಸಮಾರೋಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ₹ 4 ಲಕ್ಷ ಮೊತ್ತದ ಬಹುಮಾನಗಳನ್ನು ವಿತರಿಸಲಾಯಿತು.
ವಿಶ್ವವಿದ್ಯಾಲಯದ ನಿರ್ದೇಶಕ ಧನರಾಜ್ ಸ್ವಾಮಿ,‘ವಿಜ್ಞಾನದ ವಿಷಯಗಳನ್ನು ವಿನೋದದಿಂದ ಅರಿತುಕೊಳ್ಳಲು ಈ ಉತ್ಸವದಲ್ಲಿ ಅವಕಾಶವಿದೆ. ಪ್ರಾತ್ಯಕ್ಷಿಕೆಗಳ ಸ್ಪರ್ಧೆಯಿಂದ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಬೆಳೆಯುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.